ಲೋಕಸಭಾ ಚುನಾವಣೆ: ಶಸ್ತ್ರಾಸ್ತ್ರಗಳ ಬಳಕೆ ನಿಷೇಧ
ಉಡುಪಿ, ಮಾ.11: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಈಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಎ.18ರಂದು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಕ್ತ ಹಾಗೂ ನ್ಯಾಯ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸುವುದನ್ನು ಖಾತ್ರಿ ಪಡಿಸಲು, ಪರವಾನಿಗೆ ಹೊಂದಿರುವ ಆಯುಧ, ಶಸ್ತ್ರಾಸ್ತ್ರ, ಮಾರಕಾಯುಧಗಳು, ಮದ್ದು ಗುಂಡುಗಳನ್ನು ಹೊಂದುವುದು, ಸಾಗಿಸುವುದು ಮತ್ತು ಬಳಸುವುದರ ಮೇಲೆ ನಿರ್ಬಂಧಗಳನ್ನು ವಿಧಿಸಲು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ನಿರ್ಧರಿಸಿದ್ದು, ಚುನಾವಣಾ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆ ನಿಷೇದಿಸಿ ಆದೇಶ ಹೊಡಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಈ ಆದೇಶ ಹೊರಡಿಸಿದ ದಿನದಿಂದ ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗಿನ ಅವಧಿಯಲ್ಲಿ ಯಾವುದೇ ಶಸ್ತ್ರಾಸ್ತ್ರಗಳು, ಆಯುಧಗಳು ಮತ್ತು ಮದ್ದು ಗುಂಡುಗಳೊಂದಿಗೆ ಸಂಚರಿಸುವುದು ಮತ್ತು ಬಳಸುವುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಆತ್ಮ ರಕ್ಷಣೆಗಾಗಿ ಮತ್ತು ಕೃಷಿ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಅಧಿಕೃತ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು (ಎಸ್ಬಿಬಿಎಲ್/ಡಿಬಿಬಿಎಲ್/ ಎಸ್ಬಿಎಂಎಲ್/ ಡಿಬಿಎಂಎಲ್/ಎನ್ಪಿಬಿ/ ರೈಪಲ್) ಶಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ವಿವಿದ ಶಸ್ತ್ರಾಸ್ತ್ರಗಳನ್ನು ತಮ್ಮ ವಿಳಾಸ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಅಥವಾ ಅಧಿಕೃತವಾಗಿ ಪರವಾನಿಗೆ ಹೊಂದಿರುವ ಡೀಲರ್ ಶಾಪ್ಗಳಲ್ಲಿ ಮಾತ್ರ ಕಡ್ಡಾಯ ವಾಗಿ ಮಾ.18ರ ಒಳಗೆ ಠೇವಣಿ ಮಾಡಿ ರಶೀದಿ ಪಡೆಯಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಚುನಾವಣಾ ಪಲಿತಾಂಶ ಘೋಷಣೆಯಾದ ದಿನದಿಂದ ಒಂದು ವಾರದ ನಂತರ ಶಸ್ತ್ರಾಸ್ತ್ರ ಠೇವಣಿ ಪಡೆದ ಠಾಣಾಧಿಕಾರಿಗಳಿಂದ ಅಥವಾ ಡೀಲರ್ ಗಳಿಂದ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಹಿಂದಕ್ಕೆ ಪಡೆದುಕೊಳ್ಳಬಹುದು. ಈ ನಿಷೇಧ ಆದೇಶವು ಸರಕಾರಿ ಕರ್ತವ್ಯಕ್ಕೆ ಹಾಗೂ ಬ್ಯಾಂಕ್ ಸೆಕ್ಯೂರಿಟಿ ಸಂಸ್ಥೆಗಳ ದ್ರತೆ ಹಾಗೂ ಸಂರಕ್ಷತಾ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ವೇಳೆ ಶಸ್ತ್ರಾಸ್ತ್ರ ಆಯುಧ ಬಳಸುವುದಕ್ಕೆ ಅನ್ವಯವಾಗುವುದಿಲ್ಲ ಎಂದವರು ತಿಳಿಸಿದ್ದಾರೆ.