ನೀತಿ ಸಂಹಿತೆಯಿಂದ ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಯಿಲ್ಲ: ಎಸಿ
ಬ್ಯಾನರ್,ಬಂಟಿಂಗ್ಸ್ ಮುಕ್ತ ಚುನಾವಣೆಗೆ ಪ್ರಯತ್ನ
ಪುತ್ತೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ಯಾವುದೇ ಅಡ್ಡಿಯಿಲ್ಲ. ಧಾರ್ಮಿಕ ಕೇಂದ್ರಗಳ ವಠಾರದಲ್ಲಿ ಬ್ಯಾನರ್ ಬಂಟಿಂಗ್ಸ್ ಕಟ್ಟಲು ಅವಕಾಶಗಳಿವೆ. ಆದರೆ ರಾಜಕೀಯ ವ್ಯಕ್ತಿಗಳು ಶುಭ ಕೋರುವ ಬ್ಯಾನರ್ ಗಳನ್ನು ಅಳವಡಿಸಲು ಅವಕಾಶವಿಲ್ಲ. ಸಾರ್ವಜನಿಕ ಸ್ಥಳ ಮತ್ತು ರಸ್ತೆ ಬದಿಗಳಲ್ಲಿ ಯಾವುದೇ ಬ್ಯಾನರ್ ಬಂಟಿಂಗ್ಸ್ ಕಟ್ಟುವಂತಿಲ್ಲ. ಯಾವುದೇ ಕಾರ್ಯಕ್ರಮಗಳಿಗೆ ಅನುಮತಿ ಪಡೆಯುವುದು ಅವಶ್ಯಕ. ಕಳೆದ ವಿಧಾನಸಭಾ ಚುನಾವಣೆಯಂತೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬ್ಯಾನರ್ ಮತ್ತು ಬಂಟಿಂಗ್ಸ್ ಮುಕ್ತ ಚುನಾವಣೆ ನಡೆಸಲು ಈ ಬಾರಿಯೂ ಸಹಕಾರ ನೀಡುವಂತೆ ಉಪವಿಭಾಗಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ ತಿಳಿಸಿದ್ದಾರೆ.
ಅವರು ಪುತ್ತೂರು ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ನಡೆದ ರಾಜಕೀಯ ಮುಖಂಡರ ಸಭೆ ನಡೆಸಿ ಮಾಹಿತಿ ನೀಡಿದರು.
ಮಂಗಳೂರು ಕ್ಷೇತ್ರದ ಲೋಕಸಭಾ ಚುನಾವಣೆ ಎ. 18 ರಂದು ನಡೆಯಲಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 100352 ಮಂದಿ ಪುರುಷರು ಮತ್ತು 101374 ಮಂದಿ ಮಹಿಳೆಯರು ಸೇರಿದಂತೆ ಒಟ್ಟು 201726 ಮಂದಿ ಮತದಾನ ಮಾಡುವ ಹಕ್ಕು ಪಡೆದಿದ್ದಾರೆ. ಮತದಾರರ ಸೇರ್ಪಡೆಗೆ ಇನ್ನೂ ಅವಕಾಶ ಇರುವುದರಿಂದ ಮತದಾರರ ಸಂಖ್ಯೆ ಹೆಚ್ಚಾಗಲಿದೆ. ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಪುತ್ತೂರು ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಒಟ್ಟು 220 ಮತಕೇಂದ್ರಗಳ ವ್ಯವಸ್ಥೆ ಮಾಡಲಾಗಿದ್ದು, ಮತದಾನದ ಸುಸೂತ್ರ ನಿರ್ವಹಣೆಗಾಗಿ 220 ಬಿ.ಎಲ್.ಒ, 20 ಸೆಕ್ಟರ್ ಅಧಿಕಾರಿಗಳು, 9 ಫ್ಲೈಯಿಂಗ್ ಸ್ಕ್ವಾಡ್, 9 ಅಂಕಿಅಂಶ ಸರ್ವೆಲೆನ್ಸ್ ತಂಡ, 4 ವಿಡಿಯೋ ಸರ್ವೆಲೆನ್ಸ್ ತಂಡ, 1 ವೀಡಿಯೊ ವಿವಿಂಗ್ ತಂಡ, 6 ಮಂದಿ ಮಾಸ್ಟರ್ ಟ್ರೈನರ್ಸ್, 1 ಸುವಿಧ ಸಮಾಧಾನ ತಂಡ, ಕಚೇರಿಯಲ್ಲಿ 'ಸಿಂಗಲ್' ವಿಂಡೋ ಕಂಟ್ರೋಲ್ ರೂಮ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ವಿಧಾನಸಭಾ ಕ್ಷೇತ್ರದಲ್ಲಿ ಸೂಕ್ಷ್ಮ ಮತಗಟ್ಟೆಗಳು ಸೇರಿದಂತೆ 53 ವರ್ಲನೇಬಲ್ ಮತಗಟ್ಟೆಗಳು ಮತ್ತು 18 ಗಡಿಯಂಚಿನ ಮತದಾನ ಕೇಂದ್ರಗಳಿದ್ದು, ಈ ಮತಗಟ್ಟೆಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಕೆಲವು ಮತಗಟ್ಟೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುವುದು. ಚುನಾವಣೆಯಲ್ಲಿ ಯಾವುದೇ ಪಕ್ಷ ತಾರತಮ್ಯವಿಲ್ಲದೆ ಕರ್ತವ್ಯ ನಿರ್ವಹಿಸಲಾಗುವುದು. ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗುವುದು ಎಂದು ಎಚ್ಚರಿಸಿದ ಅವರು ಮತಕ್ಕಾಗಿ ಹಣ ಹೆಂಡ ಹಂಚದೆ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲು ಎಲ್ಲರ ಸಹಕಾರ ನೀಡಬೇಕು ಎಂದರು.
ಈ ಬಾರಿಯ ಚುನಾವಣೆಯಲ್ಲಿ ನಡೆಯಬಹುದಾದ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ`ಸೀ ವಿಸಿಲ್' ಆ್ಯಪ್ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಕಾರ್ಯಕ್ರಮಗಳ ವೇಳೆ ಇಲ್ಲವೇ ಚುನಾವಣೆಗೆ ಸಂಬಂಧಿಸಿ ಅಕ್ರಮಗಳು ನಡೆದಲ್ಲಿ ಸಾರ್ವಜನಿಕರು ಈ ಆ್ಯಪ್ ಬಳಸಿಕೊಂಡು ನೇರವಾಗಿ ದೂರು ನೀಡಬಹುದಾಗಿದೆ. ದೂರು ಬಂದ 90ನಿಮಿಷದೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ತಿಳಿಸಿದರು. ದೂರು ನೀಡುವವರು ಕೂಡಾ ಮಾಹಿತಿ ತಪ್ಪಾಗದಂತೆ ಜಾಗ್ರತೆ ವಹಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶಂಭು ಭಟ್, ತಾ.ಪಂ ಸದಸ್ಯ ಸಾಜ ರಾಧಾಕೃಷ್ಣ ಆಳ್ವ. ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಾಮದಾಸ್ ಹಾರಾಡಿ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಆಳ್ವ, ಜೆಡಿಎಸ್ ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಕಲ್ಲೇಗ ಮತ್ತಿತರರು ಉಪಸ್ಥಿತರಿದ್ದರು.