ಕೋಟ ಜೋಡಿ ಕೊಲೆ ಪ್ರಕರಣ : ವಿಚಾರಣಾಧೀನ ಖೈದಿ ಜಿಪಂ ಸದಸ್ಯ ಆಸ್ಪತ್ರೆಗೆ ದಾಖಲು
ಉಡುಪಿ, ಮಾ. 19: ಕೋಟ ಜೋಡಿ ಕೊಲೆ ಪ್ರಕರಣದ ವಿಚಾರಣಾಧೀನ ಖೈದಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ರಾಘವೇಂದ್ರ ಕಾಂಚನ್ (38) ಕಳೆದ 12 ದಿನಗಳಿಂದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ಹಿರಿಯಡ್ಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರಾಘವೇಂದ್ರ ಕಾಂಚನ್ ನನ್ನು ಕರುಳಿನ ಸಮಸ್ಯೆ ಮತ್ತು ರಕ್ತದೊತ್ತಡಕ್ಕೆ ಸಂಬಂಧಿಸಿ ಮಾ.7ರಂದು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೀಗ ಆತ ಕಳೆದ 12 ದಿನಗಳಿಂದ ಆಸ್ಪತ್ರೆಯ ವಿಶೇಷ ವಾಡ್೯ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಆಸ್ಪತ್ರೆ ಮೂಲಗಳು ದೃಢಪಡಿಸಿವೆ. ರಾಘವೇಂದ್ರ ಕಾಂಚನ್ ದಾಖಲಾಗಿರುವ ಕೊಠಡಿ ಗೆ ಜಿಲ್ಲಾ ಸಶಸ್ತ್ರ ಮಿಸಲು ಪಡೆಯ ಸಿಬ್ಬಂದಿ ಯನ್ನು ಭದ್ರತೆ ಗಾಗಿ ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೋಟದಲ್ಲಿ ಜ. 26 ರಂದು ರಾತ್ರಿ ಕೋಟ ಮಣೂರಿನಲ್ಲಿ ಯತೀಶ್ ಕಾಂಚನ್ ಹಾಗೂ ಭರತ್ ಶ್ರಿಯಾನ್ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಘವೇಂದ್ರ ಕಾಂಚನ್, ಪ್ರಮುಖ ಆರೋಪಿಗಳಾದ ರಾಜಶೇಖರ್ ರೆಡ್ಡಿ, ಚಂದ್ರಶೇಖರ್ ರೆಡ್ಡಿ , ಹರೀಶ್ ರೆಡ್ಡಿ, ಇಬ್ಬರು ಪೊಲೀಸ್ ಸಿಬ್ಬಂದಿ, ಓರ್ವ ವಿದ್ಯಾರ್ಥಿ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಆರೋಪಿಗಳೆಲ್ಲರೂ ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ.