ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಅಮೃತ್ ಶೆಣೈ ನಾಮಪತ್ರ ಸಲ್ಲಿಕೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ
ಉಡುಪಿ, ಮಾ.26: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಎಐಸಿಸಿ ಸದಸ್ಯ ಅಮೃತ್ ಶೆಣೈ ಇಂದು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಅಂತಿಮ ಕ್ಷಣದಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಂಡ ಅಮೃತ್ ಶೆಣೈ ಮಧ್ಯಾಹ್ನ 2.45ರ ಸುಮಾರಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರವನ್ನು ಸಲ್ಲಿಸಿದರು. ಅವರೊಂದಿಗೆ ಯಜ್ಞೇಶ್ ಆಚಾರ್ಯ, ಮನೋವೈದ್ಯ ಡಾ.ಪಿ.ವಿ. ಭಂಡಾರಿ, ಅಲೆನ್ ರೋಹನ್ ವಾಜ್, ಅನಿತಾ ಡಿಸೋಜ ಹಾಜರಿದ್ದರು.
‘ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟಿರುವುದು ಮತ್ತು ಜೆಡಿಎಸ್ ಪಕ್ಷದಲ್ಲಿ ಕಾಂಗ್ರೆಸ್ನವರನ್ನು ಕಣಕ್ಕೆ ಇಳಿಸಿರುವ ಕ್ರಮ ಸರಿಯಲ್ಲ. ಕಾಂಗ್ರೆಸ್ ಹೈಕಮಾಂಡ್ ಅರ್ಥ ಇಲ್ಲದ ಈ ನಿರ್ಧಾರವನ್ನು ವಿರೋಧಿಸಿ ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಅದಕ್ಕಾಗಿ ಇಂದು ನಾಮಪತ್ರ ಸಲ್ಲಿಸಿದ್ದೇನೆ. ಈವರೆಗೆ ಕಾಂಗ್ರೆಸ್ ಪಕ್ಷಕ್ಕೆ ಈವರೆಗೆ ರಾಜೀನಾಮೆ ನೀಡಿಲ್ಲ. ಮುಂದೆ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಅಮೃತ್ ಶೆಣೈ ತಿಳಿಸಿದ್ದಾರೆ.