ಪಡುಬಿದ್ರೆ: ಮತದಾನ ಜಾಗೃತಿ ಅಭಿಯಾನ
ಪಡುಬಿದ್ರಿ: ಭಾರತ ಚುನಾವಣಾ ಆಯೋಗ, ಉಡುಪಿ ಜಿಲ್ಲಾಡಳಿತ, ಸ್ವೀಪ್ ಸಮಿತಿ ಹಾಗೂ ಪಡುಬಿದ್ರಿ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಪಡುಬಿದ್ರಿಯಲ್ಲಿ ಗುರುವಾರ ನಡೆದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.
ಪಡುಬಿದ್ರಿ, ಮುದರಂಗಡಿ, ಶಿರ್ವ, ಕಾಪು, ಮೂಡುಬೆಟ್ಟು ವಲಯ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಮೇಲ್ವಿಚಾರಕರು, ಗ್ರಾಪಂ ಸಿಬ್ಬಂದಿ ಪಾಲ್ಗೊಳ್ಳುವಿಕೆಯಲ್ಲಿ ಪಡುಬಿದ್ರಿ ಪೇಟೆಯಾದ್ಯಂತ ಮತದಾನ ಜಾಗೃತಿ ಜಾಥಾ ನಡೆಯಿತು.
ಜಾಥಾಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲಾ ಉಪನಿರ್ದೇಶಕಿ ಗ್ರೇಸಿ ಎಲ್ ಗೊನ್ಸಾಲ್ವಿಸ್ ಚಾಲನೆ ನೀಡಿ, ಮತದಾನ ಪ್ರತಿಯೋರ್ವರ ಹಕ್ಕು, ಜವಾಬ್ದಾರಿ ಹಾಗೂ ಕರ್ತವ್ಯ. ಕೆಲಸದ ಒತ್ತಡದಲ್ಲಿ ಮತದಾನದ ಹಕ್ಕನ್ನು ಮರೆಯದಿರಿ. ದಲ್ಲಿ ಮಾತನಾಡಿ, ಐದು ವರ್ಷಕ್ಕೊಮ್ಮೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಅರ್ಹ ಮತದಾರರು ಕಡ್ಡಾಯ ಮತದಾನದಲ್ಲಿ ಪಾಲ್ಗೊಳ್ಳಿ ಎಂದು ಸಲಹೆ ನೀಡಿದರು.
ಮತದಾನದ ಕುರಿತು ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಪಡುಬಿದ್ರಿ ವಲಯದ ಅಂಗನವಾಡಿ ಕಾರ್ಯಕರ್ತೆಯರು ಕಡ್ಡಾಯ ಮತದಾನದ ಬಗ್ಗೆ ಪ್ರಹಸನ ನಡೆಸಿಕೊಟ್ಟರು. ಸೆಕ್ಟರ್ ಅಧಿಕಾರಿ ನಿಧೀಶ್ ವಿದ್ಯುನ್ಮಾನ ಮತಯಂತ್ರದ ಬಗ್ಗೆ ಮಾಹಿತಿ ನೀಡಿದರು.
ಪಡುಬಿದ್ರಿ ವಲಯ ಅಂಗನವಾಡಿಗಳ ಮೇಲ್ವಿಚಾರಕಿ ಶಕುಂತಳಾ ಉಪಸ್ಥಿತರಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಸ್ವಾಗತಿಸಿದರು. ಪಿಡಿಒ ಪಂಚಾಕ್ಷರಿ ಸ್ವಾಮಿ ಕೇರಿಮಠ ಕಾರ್ಯಕ್ರಮ ನಿರೂಪಿಸಿದರು.