ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರಿಗೆ ಮತದಾನ ಜಾಗೃತಿ ಅಭಿಯಾನ
ಉಡುಪಿ, ಮಾ.28: ಜಿಲ್ಲಾಡಳಿತ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾ ಬಾಲಭವನದಲ್ಲಿ ಜಿಲ್ಲೆಯ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಹಾಗೂ ವಿಶೇಷ ವರ್ಗದ ಮಹಿಳೆಯರಿಗೆ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮವನು್ನ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ವಿಶೇಷ ವರ್ಗದ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿ, ಜಿಲ್ಲೆಯಲ್ಲಿ ಯಾರೂ ಸಹ ಮತದಾನದಿಂದ ಹೊರಗುಳಿಯ ಬಾರದು. ಪ್ರತಿಯೊಬ್ಬರೂ ಮತದಾನ ಮಾಡಬೇಕೆಂದು ತಿಳಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ.ರೂಪೇಶ್ ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ಜಿಲ್ಲೆಯಲ್ಲಿ ಏರ್ಪಡಿಸಿದ ಈ ಕಾರ್ಯಕ್ರಮ ಅತ್ಯಂತ ಮಹತ್ವದ್ದು. ಎಲ್ಲಾ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ವಿಶೇಷ ವರ್ಗದ ಮಹಿಳೆಯರು ಮತದಾನ ಮಾಡುವ ಮೂಲಕ ಇತರರಿಗೂ ಮತದಾನ ಮಾಡುವಂತೆ ಪ್ರೇರೇಪಿಸ ಬೇಕೆಂದು ಕರೆ ನೀಡಿದರು.
ಮತದಾನದ ಮಹತ್ವದ ಬಗ್ಗೆ ಬಿಆರ್ಸಿ ಉಮಾ ಪಿ. ಮಾಹಿತಿ ನೀಡಿದರು. ವಿವಿ ಪ್ಯಾಟ್ ಯಂತ್ರದ ಕುರಿತು ಉಡುಪಿ ತಾಪಂ ಸಹಾಯಕ ನಿರ್ದೇಶಕ ಹರಿಕೃಷ್ಣ ಶಿವತ್ತಾಯ ಪ್ರಾತ್ಯಕ್ಷಿತೆ ನೀಡಿದರು. ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿಗಳು ಮತದಾನದ ಜಾಗೃತಿ ಕುರಿತ ನಾಟಕವನ್ನು ಪ್ರದರ್ಶಿಸಿದರು. ಮತದಾನದ ಕುರಿತು ರಂಗೋಲಿ ಕಾರ್ಯಕ್ರಮ ಹಾಗೂ ಸಹಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿಗಳು ಮತದಾನದ ಜಾಗೃತಿ ಕುರಿತ ನಾಟಕವನ್ನು ಪ್ರದರ್ಶಿಸಿದರು. ಮತದಾನದ ಕುರಿತು ರಂಗೋಲಿ ಕಾರ್ಯಕ್ರಮ ಹಾಗೂ ಸಹಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜು, ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ, ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ಚಂದ್ರಿಕಾ ಎಸ್.ನಾಯಕ್, ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿಗಳಾದ ಸಂಜೀವ ವಂಡ್ಸೆ, ಲಾವಣ್ಯ, ಕಾಜಲ್ ಉಪಸ್ಥಿತರಿದ್ದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಗ್ರೇಸಿ ಎಲ್. ಗೊನ್ಸಾಲ್ವಿಸ್ ಸ್ವಾಗತಿಸಿದರು. ಸಂತೋಷ್ ವಂದಿಸಿ, ಮಹಿಳಾ ಅಭಿವೃದ್ಧಿ ನಿಗಮದ ಸಂಯೋಜಕ ಅವಿನಾಶ್ ಕಾರ್ಯಕ್ರಮ ನಿರೂಪಿಸಿದರು.