ವಿಕಲಚೇತನರನ್ನು ಮತಗಟ್ಟೆಗೆ ಕರೆ ತರಲು ವಿಶೇಷ ವ್ಯವಸ್ಥೆ: ಜಿಲ್ಲಾಧಿಕಾರಿ ಕೊರ್ಲಪಾಟಿ
ಉಡುಪಿ, ಮಾ. 30: ಸಮಾನತೆ ಚಿಹ್ನೆ ಆಗಿರುವ ಮತದಾನವನ್ನು ಹಬ್ಬದಂತೆ ಆಚರಿಸಬೇಕಾಗಿದೆ. ಪ್ರತಿಯೊಬ್ಬರು ಮತದಾನದಲ್ಲಿ ಭಾಗವಹಿಸುವಂತೆ ಅನು ಕೂಲವಾಗುವ ನಿಟ್ಟಿನಲ್ಲಿ ವಿಕಲಚೇತನರು ಹಾಗೂ ಮಹಿಳೆಯರನ್ನು ಮತಗಟ್ಟೆಗೆ ಕರೆ ತರುವ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹೇಳಿದ್ದಾರೆ.
ಭಾರತ ಚುನಾವಣಾ ಆಯೋಗ, ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬ್ರಹ್ಮಗಿರಿಯ ಬಾಲಭವನದಲ್ಲಿ ಶನಿವಾರ ನಡೆದ ವಿಕಲಚೇತನ ಮತದಾರರಿಗೆ ಮತದಾನದ ಅರಿವು ಮೂಡಿಸುವ ಕಾರ್ಯಕ್ರಮ ದಲ್ಲಿ ಅವರು ಮಾತನಾಡುತಿದ್ದರು.
ಹಿಂದಿನ ಚುನಾವಣೆಯಲ್ಲಿ ಮತ ಚಲಾಯಿಸದೆ ಹೊರಗುಳಿದಿರುವವರನ್ನು ಗುರುತಿಸಿ ಅವರಿಗೆ ಮನವರಿಕೆ ಮಾಡಿ ಈ ಬಾರಿ ಮತ ಚಲಾಯಿಸುವಂತೆ ಅರಿವು ಮೂಡಿಸಲಾಗುತ್ತದೆ. ಮತದಾನದ ಜಾಗೃತಿಗಾಗಿ ಆಯೋಜಿಸಿದ ಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬರು ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಅವರು ತಿಳಿಸಿದರು.
ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದ ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಸಿಂಧೂ ಬಿ. ರೂಪೇಶ್ ಮಾತನಾಡಿ, ಪ್ರತೀ ವರ್ಷ ಮತದಾನ ಮಾಡುವವರ ಸಂಖ್ಯೆ ಹೆಚ್ಚಾಗಬೇಕು ಎಂಬ ಕಾರಣಕ್ಕಾಗಿ ಕಳೆದ ಬಾರಿ ಕಡಿಮೆ ಮತದಾನವಾದ ಪ್ರದೇಶದಲ್ಲಿ ಮತದಾನದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಮತದಾನದ ಜಾಗೃತಿ ಕಾರ್ಯಕ್ರಮಗಳನ್ನು ನಡೆಲಾಗುತ್ತಿದೆ ಎಂದರು.
ವಿಕಲಚೇತನರು ಹಾಗೂ ಅಶಕ್ತರಿಗೆ ಮತಗಟ್ಟೆಗೆ ಬಂದು ಮತದಾನ ಮಾಡಲು ಸಹಾಯಕವಾಗುವಂತೆ ಸಾರಿಗೆ ಹಾಗೂ ವೀಲ್ಚೇರ್ ಸೌಲಭ್ಯ ಗಳನ್ನು ಒದಗಿಸಲಾಗಿದೆ. ಮತಗಟ್ಟೆಗಳಲ್ಲಿ ನೀಡುವಂತಹ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಅಗತ್ಯ ಇದ್ದಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗು ವುದು. ಪ್ರತಿಯೊಬ್ಬರು ತಮಗೆ ಸೂಕ್ತ ಎನಿಸಿದ ಅಭ್ಯರ್ಥಿಗೆ ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದು ಅವರು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ವಿವಿ ಪ್ಯಾಟ್ ಹಾಗೂ ಇವಿಎಂ ಮತಯಂತ್ರದ ಕಾರ್ಯ ವೈಖರಿ ಬಗ್ಗೆ ಮಾಹಿತಿ ನೀಡಲಾಯಿತು. ವಿಶೇಷ ಚೇತನರಿಂದ ಮತದಾನ ಜಾಗೃತಿಯ ಕಿರು ನಾಟಕ ಪ್ರದರ್ಶನ ನಡೆಯಿತು. ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜು ಕೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಉಪಸ್ಥಿತರಿದ್ದರು. ಹರಿಕೃಷ್ಣ ಶಿವತ್ತಾಯ ಕಾರ್ಯಕ್ರಮ ನಿರೂಪಿಸಿದರು.