ಮಹಿಳೆಯರ ಬಗ್ಗೆ ಗೌರವ ಬೆಳೆಸಿಕೊಳ್ಳಿ: ಡಾ.ನಿಕೇತನ
ಮಹಿಳಾ ಸಬಲೀಕರಣ: ವಿಚಾರ ಸಂಕಿರಣ, ಆತ್ಮೀಯ ಸಮ್ಮಿಲನ
ಉಡುಪಿ, ಮಾ. 30: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಮಹಿಳೆಯರ ಬಗ್ಗೆ ಗೌರವ ಮತ್ತು ಸಂವೇದನಾ ಶೀಲತೆಯನ್ನು ಬೆಳೆಸಿಕೊಂಡು ಸೌಹಾರ್ದಯುತ ಸಮಾಜ ನಿರ್ಮಿಸಲು ಮುಂದಾಗಬೇಕು ಎಂದು ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಮತ್ತು ಉಡುಪಿ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ನಿಕೇತನ ನುಡಿದರು.
ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಲೇಖಕಿಯರ ಸಂಘದ ಸಹಯೋಗ ದಲ್ಲಿ ಆಯೋಜಿಸಲಾದ ಮಹಿಳಾ ಸಬಲೀಕರಣ, ವಿಚಾರ ಸಂಕಿರಣ, ಸಂವಾದ ಮತ್ತು ಆತ್ಮೀಯ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಸಾಹಿತಿ ಮತ್ತು ಉಪನ್ಯಾಸಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿ, ಮಹಿಳಾ ಸಬಲೀಕರಣದ ಕುರಿತು ಪ್ರಾಚೀನ ಕಾಲದಿಂದ ಈಗಿನವರೆಗೆ ನಡೆದ ಪ್ರಯತ್ನಗಳನ್ನು ವಿವರಿಸಿದರು.
ಲೇಖಕಿ ಹಾಗೂ ಉಡುಪಿ ಜಿಲ್ಲಾ ಲೇಖಕಿಯರ ಸಂಘದ ಸ್ಥಾಪಕ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಮಾತನಾಡಿ, ಮಹಿಳೆಯರು ಲ್ಯ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ವ್ಯಕ್ತಿತ್ವವನ್ನು ಪರಿಪೂರ್ಣಗೊಳಿಸುವತ್ತ ಗಮನಹರಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಮಹಿಳಾ ಸಬಲೀಕರಣ ಕುರಿತು ಕವನ ವಾಚಿಸಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಮಹಿಳಾ ಸಾಧಕಿಯರಾದ ವಸಂತಿ ಶೆಟ್ಟಿ ಬ್ರಹ್ಮಾವರ ಮತ್ತು ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸುಜಯಾ ಕೆ.ಎಸ್, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕಿ ಸುಮನಾ ಬಿ, ದೈಹಿಕ ಶಿಕ್ಷಣ ನಿರ್ದೇಶಕಿ ಸವಿತಾ, ವಿದ್ಯಾರ್ಥಿ ಪ್ರತಿನಿಧಿ ಸುಪ್ರಿತಾ ಉಪಸ್ಥಿತರಿದ್ದರು.
ಸುಜಯಾ ಕೆ.ಎಸ್ ಸ್ವಾಗತಿಸಿದರೆ ವಿದ್ಯಾರ್ಥಿನಿ ಅನುಷಾ ಕಾರ್ಯಕ್ರಮ ನಿರೂಪಿಸಿದರು. ವಿಜಯಶ್ರೀ ಪೈ ವಂದಿಸಿದರು.