ಕೆಲಸದ ಜತೆ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ: ಸಂದೀಪ್ ಪಾಟೀಲ್
ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಹೆಲ್ತ್ ಕ್ಲಬ್ಗೆ ಚಾಲನೆ
ಮಂಗಳೂರು, ಎ.1: ತಮ್ಮ ದೈನಂದಿನ ಕೆಲಸದ ಒತ್ತಡದಲ್ಲಿರುವ ಪತ್ರಕರ್ತರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ. ಹಾಗಿದ್ದಾಗ ಮಾತ್ರ ಸಮಾಜಕ್ಕೆ ಉತ್ತಮ ಸೇವೆಯನ್ನು ನೀಡಲು ಸಾಧ್ಯವಾಗುತ್ತದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ.
ನಗರದ ಪ್ರೆಸ್ಕ್ಲಬ್ನಲ್ಲಿ ಇಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉತತಮ ಆರೋಗ್ಯ ಧ್ಯೇಯದಡಿ ಪತ್ರಕರ್ತರು ಹಾಗೂ ಅವರ ಕುಟುಂಬದವರಿಗಾಗಿ ಆಯೋಜಿಸಲಾದ ಮೀಡಿಯಾ ಹೆಲ್ತ್ ಕ್ಲಬ್ಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಪತ್ರಕರ್ತರು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುವವರು. ಪೊಲೀಸರಂತೆ ಪತ್ರಕರ್ತರು ಕೂಡಾ ಸಮಾಜದ ಆಗುಹೋಗುಗಳ ಬಗ್ಗೆ ದಿನದ 24 ಗಂಟೆಯೂ ಎಚ್ಚರವಹಿಸುತ್ತಾರೆ. ಇಂತಹ ಸಮಯದಲ್ಲಿ ಆರೋಗ್ಯದ ಕಡೆಗೆ ಗಮನ ಹರಿಸುವುದು ಅಪರೂಪ. ಆದರೆ ಸಮಾಜಕ್ಕೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಗಮನಹರಿಸಿ ಆಗಾಗ್ಗೆ ಸೂಕ್ತ ವೈದ್ಯಕೀಯ ತಪಾಸಣೆ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಆಸ್ಪತ್ರೆ ಸಹಯೋಗದಲ್ಲಿ ಮೀಡಿಯಾ ಹೆಲ್ತ್ಕ್ಲಬ್ನ್ನು ಇಂದು ಪ್ರೆಸ್ಕ್ಲಬ್ನಲ್ಲಿ ಉದ್ಘಾಟಿಸಲಾಗಿದ್ದು, ಪ್ರತಿ ತಿಂಗಳು ಈ ಆರೋಗ್ಯ ತಪಾಸಣೆ ಕಾರ್ಯ ನಡೆಯಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಜೆ ಸಂಸ್ಥೆಯ ಅಧ್ಯಕ್ಷ ಎ.ಜೆ. ಶೆಟ್ಟಿ ಮಾತನಾಡಿ, ಉತ್ತಮ ಆರೋಗ್ಯವಿದ್ದಾಗ ಮಾತ್ರವೇ ಉತ್ತಮ ಜೀವನ ನಿರ್ವಹಣೆ ಸಾಧ್ಯ ಎಂದರು. ಎಜೆ ಆಸ್ಪತ್ರೆಯಿಂದ ಈಗಾಗಲೇ ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ನಾನಾ ರೀತಿಯ ವೈದ್ಯಕೀಯ ಚಿಕಿತ್ಸೆ, ತಪಾಸಣೆಗಳನ್ನು ಉಚಿತ ಹಾಗೂ ಮಿತದರದಲ್ಲಿ ಒದಗಿಸಲಾಗುತ್ತಿದೆ ಎಂದು ಹೇಳಿದರು.
ಉದ್ಘಾಟನಾ ಸಮಾರಂಭದಲ್ಲಿ ಎಜೆ ಆಸ್ಪತ್ರೆಯ ಡೀನ್ ಅಶೋಕ್ ಹೆಗಡೆ, ಆಡಳಿತ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಉಪಸ್ಥಿತರಿದ್ದರು. ಪತ್ರಕರ್ತ ರವೀಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ವಂದಿಸಿದರು.
ಪ್ರತಿ ತಿಂಗಳ ಎರಡನೆ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ಪ್ರೆಸ್ಕ್ಲಬ್ನಲ್ಲಿ ವೈದ್ಯಕೀಯ ತಪಾಸಣೆ ನಡೆಯಲಿದೆ