ಅವಕಾಶಗಳನ್ನು ಬಳಸಿಕೊಳ್ಳುವ ಕಲೆಗಾರಿಕೆ ನಮ್ಮಲ್ಲಿರಬೇಕು: ಪ್ರೊ.ಕಿಶೋರಿ ನಾಯಕ್
ಕೊಣಾಜೆ: ವಿಶ್ವವಿದ್ಯಾಲಯ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ
ಕೊಣಾಜೆ: ಇಂದಿನ ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ ಮುನ್ನಡೆಯಬೇಕಾದ ಅಗತ್ಯತೆ ಇದೆ. ವಿದ್ಯಾರ್ಥಿ ಜೀವನದಲ್ಲಿ ಸಿಗುವ ಉತ್ತಮ ಅವಕಾಶಗಳನ್ನು ಬಳಸಿಕೊಳ್ಳುವ ಕಲೆಗಾರಿಗೆ ನಮ್ಮಲ್ಲಿರಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಕಿಶೋರಿ ನಾಯಕ್ ಅವರು ಅಭಿಪ್ರಾಯಪಟ್ಟರು.
ಅವರು ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ನಲ್ಲಿರುವ ವಿಶ್ವವಿದ್ಯಾಲಯ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ನಮಗೆ ಕೆಲವೊಂದು ಅವಕಾಶಗಳು ಲಭಿಸಿದರೂ ಅದನ್ನು ಬಳಸಿಕೊಳ್ಳುವಲ್ಲಿ ವಿಫಲರಾಗುತ್ತೇವೆ. ಆದ್ದರಿಂದ ನಾವು ಭವಿಷ್ಯದ ಆಲೋಚನೆಯೊಂದಿಗೆ ಮುನ್ನಡೆಯಬೇಕು. ಜೊತೆಗೆ ತಾವು ಕಲಿತ ವಿದ್ಯಾ ಸಂಸ್ಥೆ, ಗುರುಗಳು ಹಾಗೂ ತಮಗೆ ಆಧಾರವಾಗಿರುವ ಪೋಷಕರನ್ನು ನಾವು ಎಂದಿಗೂ ಮರೆಯದೆ ಜ್ಞಾನ ಸಂಪತ್ತಿನ ಮೂಲಕ ಅವರಿಗೆ ಕೀರ್ತಿ ತರುವ ಕಾರ್ಯವನ್ನು ಮಾಡಿದರೆ ನಾವು ಪುಣ್ಯವಂತರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಶಿಕ್ಷಕ ರಕ್ಷಕ ಸಂಘದ ಕಾರ್ಯದರ್ಶಿ ಇಮಾನುನ್ ರಾಜನ್ ಅವರು, ಇಂದು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಸರ್ಕಾರ, ವಿದ್ಯಾಸಂಸ್ಥೆಗಳು ಹಲವಾರು ಸೌಲಭ್ಯಗಳನ್ನು ಒದಗಿಸಿಕೊಡುತ್ತಿದೆ. ಇಂತಹ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸರಿಯಾದ ನಿಟ್ಟಿನಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದಶ್ವವಿದ್ಯಾಲಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಅನಿತಾ ರವಿಶಂಕರ್ ಅವರು, ಜ್ಞಾನ ಸಂಪತ್ತನ್ನು ಹೆಚ್ಚಿಸಿಕೊಂಡು ಮಾದರಿ ಜೀವನ ನಡೆಸಬೇಕಾದರೆ ವಿದ್ಯಾರ್ಥಿ ಜೀವನದಲ್ಲೇ ಪ್ರಯತ್ನ ಅತ್ಯಗತ್ಯ. ಈ ನಿಟ್ಟಿನಲ್ಲಿ ವಿಶ್ವ ವಿದ್ಯಾಲಯ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳನ್ನು ಒದಗಿಸಿಕೊಡಲಾಗುತ್ತಿದೆ ಎಂದರು.
ಮಂಗಳೂರು ವಿಶ್ವವಿದ್ಯಾಲಯದ ಪ್ರೊ.ಎ.ಎಂ.ಖಾನ್ ಅವರು ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.ಉಪನ್ಯಾಸಕಿ ಶೃತಿ ಎನ್ ವಂದಿಸಿ, ಉಪನ್ಯಾಸಕಿ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.