ಅಸಂಘಟಿತ ವಲಯದ ಕಾರ್ಮಿಕರಿಗೆ ಮೋದಿ ಸರಕಾರದಿಂದ ಹೆಚ್ಚಿನ ಸವಲತ್ತು: ಮಟ್ಟಾರು
ಉಡುಪಿ, ಎ.3: ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ದೊಡ್ಡ ಸಂಖ್ಯೆಯ ಕಾರ್ಮಿಕ ವರ್ಗಕ್ಕೆ ಇತಿಹಾಸದಲ್ಲಿ ಕಂಡು ಕೇಳರಿಯದಷ್ಟು ಸವಲತ್ತುಗಳನ್ನು ಬಿಜೆಪಿಯ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನೀಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕ ವರ್ಗಕ್ಕೆ ಕನಿಷ್ಠ ವೇತನ ನಿಗದಿ, ಇಎಸ್ಐ ಸೌಲಭ್ಯ ಒದಗಿಸುವಿಕೆ, ಪಿಂಚಣಿ, ಪಿಎಫ್ ಮತ್ತಿನ್ನಿತರ ಅನೇಕ ಸೌಲಭ್ಯಗಳನ್ನು ನೀಡುವ ಮೂಲಕ ಅಸಂಘಟಿತ ವಲಯದ ಕಾರ್ಮಿಕರ ಬಂಧು ಎನಿಸಿದೆ ಎಂದು ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದ್ದಾರೆ.
ಸಂಸದೆ ಶೋಭಾ ಕರಂದ್ಲಾಜೆ ಕೂಡಾ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸಿದ್ದು, ಚಿಕ್ಕಮಗಳೂರಿನಲ್ಲಿ ಹೊಸ ಇಎಸ್ಐಆಸ್ಪತ್ರೆಗೆ ತಾತ್ವಿಕ ಮಂಜೂರಾತಿ ದೊರಕಿಸಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಉಡುಪಿಗೂ ಹೊಸ ಇಎಸ್ಐ ಆಸ್ಪತ್ರೆ ತರಲಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆದುದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಅಸಂಘಟಿತ ವಲಯದ ಕಾರ್ಮಿಕರು ಬಿಜೆಪಿಯ ಶೋಭ ಕರಂದ್ಲಾಜೆ ಅವರನ್ನು ಬೆಂಬಲಿಸುವಂತೆ ಮಟ್ಟಾರು ರತ್ನಾಕರ ಹೆಗ್ಡೆ ವಿನಂತಿಸಿದ್ದಾರೆ.