ಎ.25ಕ್ಕೆ ಹಿರಿಯ ನಾಗರಿಕರಿಗೆ ವಿಶೇಷ ಲೋಕಅದಾಲತ್
ಉಡುಪಿ, ಎ.3: ಉಡುಪಿಯ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಹಿರಿಯ ನಾಗರಿಕರನ್ನು ಒಳಗೊಂಡ ಯೋಗ್ಯ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಇದೇ ಎ.25ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣದಲ್ಲಿ ವಿಶೇಷ ಲೋಕ ಅದಲಾತ್ನ್ನು ಆಯೋಜಿಸಲಾಗಿದೆ.
60 ವರ್ಷ ದಾಟಿದ ಹಿರಿಯ ನಾಗರಿಕರನ್ನೊಳಗೊಂಡ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು (ಜಿಲ್ಲಾ ಹಾಗೂ ಉಚ್ಚ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ) ಮತ್ತು ಸಿವಿಲ್ ಪ್ರಕರಣಗಳನ್ನು (ಬಾಡಿಗೆ, ಅನುಭೋಗದ ಹಕ್ಕುಗಳು, ನಿರ್ಬಂಧಕಾಜ್ಞೆ ಮೊಕದ್ದಮೆಗಳು) ರಾಜೀ ಮುಖಾಂತರ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ.
ಹಿರಿಯ ನಾಗರಿಕ ಕಕ್ಷಿಗಾರರು ಇದರ ಸದುಪಯೋಗಪಡೆದುಕೊಳ್ಳುವಂತೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿವೇಕಾನಂದ ಎಸ್. ಪಂಡಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.