ನೀರಿನ ಟ್ಯಾಂಕ್ಗೆ ಬಿದ್ದು ಮೂವರು ಮಕ್ಕಳು ಮೃತ್ಯು : ಸರ್ಕಾರದಿಂದ ಪರಿಹಾರಕ್ಕೆ ಯತ್ನ-ಶಾಸಕ ಮಠಂದೂರು
ಪುತ್ತೂರು: ಇಲ್ಲಿನ ಬೆಟ್ಟಂಪಾಡಿ ಗ್ರಾಮದ ಉಡ್ಡಂಗಲದಲ್ಲಿ ಬುಧವಾರ ಸಂಜೆ ಪಂಚಾಯತ್ ನಿರ್ಮಿಸಿದ ನೀರಿನ ಟ್ಯಾಂಕ್ಗೆ ಬಿದ್ದು ಮೂವರು ಮಕ್ಕಳು ಮೃತಪಟ್ಟ ಘಟನೆಗೆ ಸಂಬಂಧಿಸಿ ಮೃತರ ಕುಟುಂಬಕ್ಕೆ ಸರ್ಕಾರದ ಕಡೆಯಿಂದಲೇ ಪರಿಹಾರ ಕಾರ್ಯ ಮಾಡಬೇಕಾಗಿದೆ. ಜಿಲ್ಲಾಧಿಕಾರಿಗಳು ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ಶಾಸಕನ ನೆಲೆಯಲ್ಲಿ ನಾನೂ ಸ್ಪೆಷಲ್ ಕನ್ಸಡ್ರೇಶನ್ ಮಾಡುತ್ತೇನೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಬುಧವಾರ ರಾತ್ರಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸ್ಥಳೀಯರ ಬೇಡಿಕೆಯನ್ನು ಆಲಿಸಿದ ಜಿಲ್ಲಾಧಿಕಾರಿಗಳು ಸರ್ಕಾರದ ಕಡೆಯಿಂದ ಏನು ಕ್ರಮ ಸಾಧ್ಯವಿದೆಯೋ ಅದನ್ನು ಮಾಡುವುದಾಗಿ ಹೇಳಿದರು. ಸಹಾಯಕ ಕಮೀಷನರ್ ಜೊತೆ ಚರ್ಚಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಹಾಗೂ ನೊಂದವರ ಕುಟುಂಬಕ್ಕೆ ಪರಿಹಾರ ಒದಗಿಸಲು ಪ್ರಯತ್ನ ನಡೆಸುವುದಾಗಿ ತಿಳಿಸಿದರು.
ರಾತ್ರಿ ವೇಳೆಗೆ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಮಕ್ಕಳ ಮೃತ ದೇಹವನ್ನು ತರಲಾಗಿತ್ತು. ಈ ಸಂದರ್ಭದಲ್ಲಿ ಆಸ್ಪತ್ರೆಗೂ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿದರು. ಸಹಾಯಕ ಕಮೀಷನರ್ ಎಚ್.ಕೆ. ಕೃಷ್ಣಮೂರ್ತಿ, ಶಾಸಕ ಸಂಜೀವ ಮಠಂದೂರು ಸೇರಿದಂತೆ ಸಾವಿರಾರು ಮಂದಿ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಪರಿಹಾರಕ್ಕೆ ವ್ಯವಸ್ಥೆ
ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಪರಿಹಾರ ಒದಗಿಸಲು ಸಹಾಯಕ ಕಮೀಷನರ್ ಮೂಲಕ ವರದಿ ಮಾಡಬೇಕಾಗಿದೆ. ಸರ್ಕಾರದ ಮಟ್ಟದಲ್ಲಿ ಸಿಗುವ ಪರಿಹಾರಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.