ಕ್ರಿಕೆಟ್ ಬೆಟ್ಟಿಂಗ್ ದಂಧೆ: ಮೂವರು ಬುಕ್ಕಿಗಳ ಬಂಧನ
ಮಂಗಳೂರು, ಎ.4: ನಗರದ ಹೊರವಲಯದ ಮೂಡುಶೆಡ್ಡೆ ಗಾಲ್ಫ್ ಕ್ಲಬ್ ಬಳಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡ ಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 13ಕ್ಕೆ ಏರಿದೆ.
ಉಳಾಯಿಬೆಟ್ಟು ಬಾಡಿಗೆ ಮನೆಯಲ್ಲಿ ವಾಸವಿರುವ ಮಯ್ಯದ್ದಿ(37), ಗುರುಪುರ ಸತ್ಯ ದೇವತಾ ಮಂದಿರ ಬಳಿಯ ನಿವಾಸಿ ಕುಮಾರ್ (39), ಮೂಡುಶೆಡ್ಡೆ ಜಾರದ ಬೆಟ್ಟು ನಿವಾಸಿ ಉಮೇಶ್ (47) ಬಂಧಿತರು. ಆರೋಪಿಗಳಿಂದ 26 ಸಾವಿರ ರೂ. ಸಹಿತ 66 ಸಾವಿರ ರೂ. ವೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ನಗರ ಉತ್ತರ ಉಪವಿಭಾಗ ರೌಡಿ ನಿಗ್ರಹದಳಕ್ಕೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಸಬ್ ಇನ್ಸ್ಪೆಕ್ಟರ್ ಶೀತಲ್ ಅಲಗೂರು ಮತ್ತು ಅವರ ತಂಡ ಕಾವೂರು ಇನ್ಸ್ಪೆಕ್ಟರ್ಗೆ ಮಾಹಿತಿ ನೀಡಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.
ಆರ್ಸಿಬಿ ಮತ್ತು ರಾಜಸ್ಥಾನ್ ರಾಯಲ್ ತಂಡಗಳ ನಡುವೆ ನಡೆಯುತ್ತಿದ್ದ ಏಕದಿನ ಕ್ರಿಕೆಟ್ ಪಂದ್ಯಾವಳಿಗೆ ಮೊಬೈಲ್ ಅಪ್ಲಿಕೇಶನ್ ಮೂಲಕ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದರು.
ಎಸಿಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಪಣಂಬೂರು ಪೊಲೀಸ್ ನಿರೀಕ್ಷಕ ಕೆ.ಆರ್. ನಾಯಕ್, ಮಂಗಳೂರು ಉತ್ತರ ಉಪವಿಭಾಗ ರೌಡಿ ನಿಗ್ರಹದಳದ ಪೊಲೀಸ್ ಉಪನಿರೀಕ್ಷಕ ಶೀತಲ್ ಅಲಗೂರು, ರೌಡಿ ನಿಗ್ರಹದಳದ ಎಎಸ್ಐ ಮುಹಮ್ಮದ್, ಕುಶಲ ಮಣಿಯಾಣಿ, ಸತೀಶ್ ಎಂ., ವಿಜಯ ಕಾಂಚನ್, ಇಸಾಕ್, ಶರಣ್ ಕಾಳಿ ಮತ್ತು ಕಾವೂರು ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.