‘ಆರೋಗ್ಯ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಅರಿವು ಅಗತ್ಯ: ಡಾ.ಓಂಪ್ರಕಾಶ್ ಕಟ್ಟಿಮನಿ
ಮಣಿಪಾಲ, ಎ.5: ಮಾರಣಾಂತಿಕ ಕಾಯಿಲೆಗಳ ನಿರ್ಮೂಲನೆಗೆ ಸರಕಾರದ ಮಟ್ಟದಲ್ಲಿ ಉಚಿತವಾಗಿ ನೀಡಲಾಗುತ್ತಿರುವ ಔಷಧಗಳ ಕುರಿತು ಸಾರ್ವಜನಿಕ ರಲ್ಲಿ ಮಾಹಿತಿ ಕೊರತೆಯಿದ್ದು, ಹೆಚ್ಚಿನ ಜನರು ಚಿಕಿತ್ಸೆ ಪಡೆಯುವಲ್ಲಿ ವಿಫಲ ರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಂಗನವಾಡಿ ಶಿಕ್ಷಕರು ಹಾಗೂ ಆಶಾ ಕಾರ್ಯಕರ್ತೆ ಯರು ಆರೋಗ್ಯ ಇಲಾಖೆಯಿಂದ ನೀಡಲಾಗುತ್ತಿರುವ ಸೌಲ್ಯಗಳ ಕುರಿತು ಮಾಹಿತಿ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆರೋಗ್ಯ ಕಾರ್ಯ ಕ್ರಮಗಳ ಪ್ರಯೋಜನ ಪಡೆದುಕೊಳ್ಳುಂತೆ ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಓಂಪ್ರಕಾಶ್ ಕಟ್ಟಿಮನಿ ಹೇಳಿದ್ದಾರೆ.
ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಮಣಿಪಾಲ ಕಾಲೇಜ್ ಆಪ್ ನರ್ಸಿಂಗ್ ಮಣಿಪಾಲ, ಜಿಲ್ಲಾಸ್ಪತ್ರೆಯ ಎನ್ಸಿಡಿ ಘಟಕ ಇವುಗಳ ಸಹಯೋಗದಲ್ಲಿ ಮಣಿಪಾಲದ ಕಾಲೇಜ್ ಆಫ್ ನರ್ಸಿಂಗ್ನಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆುನ್ನು ಉದ್ಘಾಟಿಸಿ ಮಾತನಾಡುತಿದ್ದರು.
ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸ್ವಚ್ಚತೆ ಬಹುಮುಖ್ಯವಾಗಿದ್ದು, ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ಮಳೆಗಾಲ ದಲ್ಲಿ ಅಲ್ಲಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗಿ ಮಲೇರಿಯಾದಂಥ ರೋಗ ಗಳು ಹರಡುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮನೆಯ ಪರಿಸರದಲ್ಲಿ ಶೇಖರಣೆಯಾಗಿರುವ ನೀರನ್ನು ಹರಿದು ಹೋಗುವಂತೆ ಮಾಡುವ ಜೊತೆಗೆ ಅದಕ್ಕೆ ರಾಸಾಯಿನಿಕಗಳನ್ನು ಸಿಂಪಡಿಸಬೇಕು ಎಂದರು.
ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ ಎಂಬ ಧ್ಯೇಯ ವಾಕ್ಯ ದೊಂದಿಗೆ ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ದಿನದಂದು ಹೆಚ್ಚುತ್ತಿರುವ ಮಾರಣಾಂತಿಕ ಕಾಯಿಲೆಗಳನ್ನು ತಡೆಗಟ್ಟುವಿಕೆಯ ಬಗ್ಗೆ ಚರ್ಚಿಸಿ, ಮಾಹಿತಿ ನೀಡಲಾಗುತ್ತದೆ. ಪೋಷಕರ ಐಶಾರಾಮಿ ಜೀವನ ಶೈಲಿ ಯಿಂದಾಗಿ, ಕೆಲವೊಮ್ಮೆ ಮಕ್ಕಳು ಪೋಷಕರ ನಿರ್ಲಕ್ಷಕ್ಕೆ ಒಳಗಾಗಿ ಮದ್ಯಪಾನ, ಧೂಮಪಾನ, ಡ್ರಗ್ಸ್ನಂತಹ ದುಷ್ಚಟಗಳಿಗೆ ಬಲಿಯಾಗಿ ಮಾನಸಿಕ ಹತೋಟಿ ಕಳೆದುಕೊಳ್ಳುತ್ತಿದ್ದಾರೆ ಎಂವರು ಕಳವಳ ವ್ಯಕ್ತಪಡಿಸಿದರು.
ಕ್ಷಯರೋಗ ಹಾಗೂ ಕುಷ್ಠ ರೋಗಗಳು ಒಂದೇ ನಾಣ್ಯದ ಎರಡು ಮುಖ ಗಳಿದ್ದಂತೆ. ಸಾಂಕ್ರಮಿಕ ರೋಗಗಳು ಒಬ್ಬರಿಂದ ಒಬ್ಬರಿಗೆ ಹರಡುವ ಕಾರಣ ರೋಗದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ರೋಗಿಗಳನ್ನು ಊರಿನಿಂದ ಹೊರಗಿಡುವ ಪ್ರಕ್ರಿಯೆ ಈಗಲೂ ಹಲವೆಡೆ ನಡೆಯುತ್ತಿದೆ. ಕುಷ್ಠರೋಗ ಬೂದಿ ಮುಚ್ಚಿದ ಕೆಂಡದಂತಿದ್ದು, ಸಂಪೂರ್ಣವಾಗಿ ದೇಹವನ್ನು ಆಕ್ರಮಿಸುವ ಮೊದಲು ಗೋಚರಿಸುವುದಿಲ್ಲ. ಆದರೆ ಆರಂದಲ್ಲಿ ರೋಗದ ಲಕ್ಷಣಗಳನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಿದಲ್ಲಿ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ವಿವರಿಸಿದರು.
ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್ನ ಡೀನ್ ಡಾ. ಅನೀಷ್ ಜಾರ್ಜ್ ಮಾತನಾಡಿ, ಜಿಲ್ಲೆಯಲ್ಲಿ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಿ ಜಾಗೃತಿ ಮೂಡಿಸುವ ಮೂಲಕ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಬೇಕು ಎಂದರು.
ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಹಾಗೂ ನೋಡಲ್ ಅಧಿಕಾರಿ ಡಾ. ಸುರೇಂದ್ರ ಚಿಂಬಾಳ್ಕರ್, ಆಯುಷ್ಮಾನ್ ಆರೋಗ್ಯ ಕರ್ನಾಟಕ ಸೇವೆ ಯೋಜನೆಯ ವಿವಿಧ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸ್ವಚ್ಚತಾ ಅಭಿಯಾನ ಹಾಗೂ ಮತದಾನದ ಪ್ರತಿಜ್ಞಾ ವಿಧಿ ಭೋದಿಸಲಾಯಿತು.ಮಾರಣಾಂತಿಕ ಕಾಯಿಲೆಗಳ ಕುರಿತು ಜಾಗೃತಿ ಮೂಡಿ ಸುವ ಕಿರು ನಾಟಕ ಪ್ರದರ್ಶನ ನಡೆಯಿತು. ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ ಉಪಸ್ಥಿತರಿದ್ದರು.
ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್ನ ಸಮುದಾಯ ಶುಶ್ರೂಷಕ ವಿಭಾಗ ಮುಖ್ಯಸ್ಥ ಡಾ. ಶಶಿಧರ ವೈ.ಎನ್ ಸ್ವಾಗತಿಸಿದರು. ಉಪನ್ಯಾಸಕಿ ರೇಷ್ಮಾ ಆರ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ, ಪ್ರಬಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿಜಯಬಾಯಿ ವಂದಿಸಿದರು.