ಹೆಬ್ರಿ: ಮೈತ್ರಿ ಅಭ್ಯರ್ಥಿ ಪರ ಗೋಪಾಲ ಭಂಡಾರಿ ಮತಯಾಚನೆ
ಹೆಬ್ರಿ, ಎ. 8: ಹೆಬ್ರಿ ಮತ್ತು ಚಾರ ಗ್ರಾಮಗಳಲ್ಲಿ ಲೋಕಸಭಾ ಚುನಾವಣೆ ಯಲ್ಲಿ ಮೈತ್ರಿ ಅಭ್ಯರ್ಥಿಯಾಗಿರುವ ಪ್ರಮೋದ್ ಮಧ್ವರಾಜ್ ಪರವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಗೋಪಾಲ ಭಂಡಾರಿ ಮತ ಯಾಚನೆ ಮಾಡಿದರು.
ಇದೇ ವೇಳೆ ಹೆಬ್ರಿ ತಾಲೂಕು ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಬೂತ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಗೋಪಾಲ ಭಂಡಾರಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರಕಾರದ ವೈಫಲ್ಯ ಹಾಗೂ ರಾಜ್ಯದ ಸಮ್ಮಿಶ್ರ ಸರಕಾರದ ಸಾಧನೆಗಳನ್ನು ಮತದಾರರಿಗೆ ಮನವರಿಕೆ ಮಾಡಿ ಮತ ಕೇಳುವಂತೆ ಸೂಚಿಸಿದರು.
ಚಾರದ ಜವಾಹರ್ ನವೋದಯ ವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸ್ನಾತಕೋತ್ತರ ಅಧ್ಯಯನ ಕೇಂದ್ರ, ಉಡುಪಿ-ಹೆಬ್ರಿ- ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ, ಹೆಬ್ರಿ ತಾಲೂಕು ಸೇರಿದಂತೆ ಕಾಂಗ್ರೆಸ್ ಪಕ್ಷ ಈ ಭಾಗಕ್ಕೆ ನಿರಂತರವಾಗಿ ಸಾಕಷ್ಟು ಕೊಡುಗೆಗಳನ್ನು ನೀಡಿದೆ ಎಂದು ಗೋಪಾಲ ಭಂಡಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಕಳ ಕ್ಷೇತ್ರ ಉಸ್ತುವಾರಿ ಭರತ್ ಮುಂಡೊಡಿ, ಕಾಂಗ್ರೆಸ್ ನಾಯಕ ನೀರೆ ಕೃಷ್ಣ ಶೆಟ್ಟಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ರಾಘವ ದೇವಾಡಿಗ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತ ಲಕ್ಷ್ಮಣ್, ಸ್ಥಳೀಯ ಮುಖಂಡ ವಾದಿರಾಜ ಶೆಟ್ಟಿ, ಚಾರ ಗ್ರಾಪಂ ಅಧ್ಯಕ್ಷ ಸಂದೀಪ ನಾಯ್ಕಾ ಹಾಗೂ ಇತರರು ಉಪಸ್ಥಿತರಿದ್ದರು.