ಸೋಲಿನ ಭಯದಿಂದ ಶೋಭಾ ಹತಾಶೆ: ಪ್ರಮೋದ್ ಮಧ್ವರಾಜ್
ಉಡುಪಿ, ಎ.9: ಕಳೆದ ಬಾರಿ ಮೋದಿ ಅಲೆಯಲ್ಲಿ ಗೆದ್ದವರು ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಹೆಸರನ್ನು ಉಳಿಸಿಕೊಳ್ಳಲಿಲ್ಲ. ಹಾಗೇಯೇ ಮೋದಿ ಕೂಡ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಿಲ್ಲ. ಶೋಭಾ ಕರಂದ್ಲಾಜೆ ತನ್ನ ಅಧಿಕಾರಾವಧಿಯಲ್ಲಿ ಜನರ ಸಮಸ್ಯೆಗೆ ಸ್ಪಂದಿಸದೆ ಈಗ ಮೋದಿಯವರ ಮುಖ ನೊಡಿ ಮತ ನೀಡಿ ಎನ್ನುತ್ತಿರುವುದು ತನ್ನ ಸೋಲಿನ ಭಯದಿಂದ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಟೀಕಿಸಿದ್ದಾರೆ.
ಚಿಕ್ಕಮಗಳೂರಿನ ಉಪ್ಪಳ್ಳಿ ಕ್ರಾಸ್ನಲ್ಲಿ ನಡೆದ ಬಹಿರಂಗ ಚುನಾವಣಾ ಸಭೆಯಲ್ಲಿ ಅವರು ಮತದಾರರ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಶೋಭಾ ಕರಂದ್ಲಾಜೆಯವರು ಚಿಕ್ಕಮಗಳೂರಿನ ನೀರಾವರಿ ಸಮಸ್ಯೆ, ನೀರಿನ ಸಮಸ್ಯೆ, ರೈತರ ಸಮಸ್ಯೆಗಾಗಲೀ ಹಾಗೆಯೇ ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಯನ್ನು ಪರಿಹರಿಸುವಲ್ಲಿ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಕಸ್ತೂರಿ ರಂಗನ್ ವರದಿ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಲು ವಕೀಲರನ್ನು ನೇಮಕ ಮಾಡುವಲ್ಲಿ ಶೋಭಾ ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದರು.