ಎ.11ರಂದು ‘ವಾಕ್ ವಿತ್ ಟಾಕ್’ ವಿಶೇಷ ಜಾಗೃತಿ ಕಾರ್ಯಕ್ರಮ
ಮಂಗಳೂರು, ಎ.10: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಆಕಾಶವಾಣಿ ಮಂಗಳೂರು, ರೋಟರ್ಯಾಕ್ಟ್ ಮಂಗಳೂರು ಸಿಟಿ ಮತ್ತು ಜಿಲ್ಲಾ ಸ್ವೀಪ್ ಸಮಿತಿಯ ಸಹಯೋಗದಲ್ಲಿ ಎ.11ರಂದು 4:30ಕ್ಕೆ ‘ವಾಕ್ ವಿತ್ ಟಾಕ್’ ಮತದಾರರ ವಿಶೇಷ ಜಾಗೃತಿ ಕಾರ್ಯಕ್ರಮವು ಕದ್ರಿ ಉದ್ಯಾನವನದಲ್ಲಿ ಜರುಗಲಿದೆ.
ಕದ್ರಿ ಉದ್ಯಾನವನದಲ್ಲಿ ವಾಕಿಂಗ್ನಿರತರು ಮತದಾನದ ಮಹತ್ವದ ಬಗ್ಗೆ ಮುಕ್ತವಾಗಿ ಮಾತನಾಡಲಿರುವರು. ಜೊತೆಗೆ ಗಣ್ಯರು, ಶಿಕ್ಷಣ, ಸಾಂಸ್ಕೃತಿಕ, ಸಾಹಿತ್ಯ, ಕ್ರೀಡೆ, ಸಿನೆಮಾ, ಸ್ವಾತಂತ್ರ್ಯ ಯೋಧರು, ಸಮಾಜದ ವಿವಿಧ ಕ್ಷೇತ್ರಗಳ ಪ್ರಮುಖರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮವನ್ನು ಬ್ರಿಗೇಡಿಯರ್ ಐ.ಎನ್.ರೈ ಉದ್ಘಾಟಿಸಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ಎಸ್.ಪ್ರದೀಪ್ಕುಮಾರ್ ಕಲ್ಕೂರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಸ್ವೀಪ್ ಸಮಿತಿಯ ಅಧ್ಯಕ್ಷ ಡಾ.ಸೆಲ್ವಮಣಿ ಆರ್., ಜಿಲ್ಲಾ ಅಪರ ಜಿಲ್ಲಾಧಿಕಾರಿ ಆರ್. ವೆಂಕಟಾಚಲಾಪತಿ, ವಾರ್ತಾಧಿಕಾರಿ ರೋಹಿಣಿ ಕೆ., ಸ್ವೀಪ್ನ ಸದಸ್ಯ ಕಾರ್ಯದರ್ಶಿ ಸುಧಾಕರ್ ಕೆ., ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆಂಟ್ ಡಾ.ಮುರಳಿ ಮೋಹನ ಚೂಂತಾರು, ಮಂಗಳೂರು ತಾಲೂಕು ಕಸಾಪ ಅಧ್ಯಕ್ಷೆ ವಿಜಯಲಕ್ಷ್ಮಿ ಶೆಟ್ಟಿ, ಮಹಿಳಾ ಒಕ್ಕೂಟದ ಅಧ್ಯಕ್ಷೆ ಚಂಚಲಾ ತೇಜೋಮಯ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮ ಸಂಯೋಜಕ ಡಾ.ಸದಾನಂದ ಪೆರ್ಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ.