ಬಿಜೆಪಿಗೆ ದಲಿತರ ಬಗ್ಗೆ ಕಾಳಜಿ ಇಲ್ಲ: ಶ್ರೀಕರ ಕುಕ್ಕೇಡಿ
ಮಂಗಳೂರು, ಎ.11: ಕಳೆದ ಐದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿಗೆ ದಲಿತರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ, ಪಂಗಡ ಘಟಕದ ಅಧ್ಯಕ್ಷ ಶ್ರೀಕರ ಕುಕ್ಕೇಡಿ ಆರೋಪಿಸಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು ಡಾ.ಬಿ.ಆರ್.ಅಂಬೇಡ್ಕರ್ ಈ ದೇಶಕ್ಕೆ ನೀಡಿದ್ದ ಸಂವಿಧಾನ ಉಳಿವಿಗಾಗಿ ಕಾಂಗ್ರೆಸ್ ಕಟಿಬದ್ಧವಾಗಿದ್ದರೆ, ಬಿಜೆಪಿ ಸಂವಿಧಾನವನ್ನು ನಾಶಪಡಿಸಲು ಹುನ್ನಾರ ನಡೆಸುತ್ತಿದೆ. ಇದಕ್ಕಾಗಿ ಬಿಜೆಪಿಯನ್ನು ಈ ಬಾರಿ ಮತದಾರರು ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.
ದ.ಕ.ಜಿಲ್ಲೆಯಲ್ಲಿ ದಲಿತ ಸಮುದಾಯದವರು ಸಾಕಷ್ಟು ಸಮಸ್ಯೆಯಲ್ಲಿದ್ದರೂ ಸಂಸದರರಿಗೆ ನಮ್ಮ ಬಗ್ಗೆ ಯಾವುದೇ ಕಾಳಜಿ ಇಲ್ಲ. ನಮ್ಮ ಬೇಡಿಕೆಯನ್ನು ಈಡೇರಿಸಲೂ ಸಂಸದರಿಗೆ ಮನಸ್ಸಿಲ್ಲ. ಆದ್ದರಿಂದ ದಲಿತ ಸಮುದಾಯದವರು ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಶ್ರೀಕರ ಕುಕ್ಕೇಡಿ ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಘಟಕದ ಮುಖಂಡರಾದ ರಘುರಾಜ್ ಕದ್ರಿ, ಪ್ರೇಮನಾಥ್ ಬಳ್ಳಾಲ್ಬಾಗ್, ದಿನೇಶ್, ನಾಗವೇಣಿ, ರೋಹಿತ್ ಉಳ್ಳಾಲ್ ಉಪಸ್ಥಿತರಿದ್ದರು.