ಭಾರತೀಯರ ಅಗತ್ಯತೆ ಪೂರೈಸುವಲ್ಲಿ ಕಾಂಗ್ರೆಸ್, ಬಿಜೆಪಿ ವಿಫಲ: ಪಿ.ಪರಮೇಶ್ವರ
ಉಡುಪಿ, ಎ.13: ಜಾತ್ಯಾತೀತತೆ ಹೆಸರಿನಲ್ಲಿ ಬಹುತೇಕ 60ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಹಾಗೂ ಕೋಮುವಾದದ ಹೆಸರಿನಲ್ಲಿ ಸುಮಾರು 10 ವರ್ಷಗಳ ಕಾಲ ಆಡಳಿತ ನಡೆಸಿರುವ ಬಿಜೆಪಿ ಭಾರತೀಯರ ಮೂಲಭೂತ ಅಗತ್ಯತೆಗಳನ್ನು ಪೂರೈಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಪಿ.ಪರಮೇಶ್ವರ ಚಿಕ್ಕಮಗಳೂರು ಆರೋಪಿಸಿದ್ದಾರೆ.
ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಕೃಷಿ ಕ್ಷೇತ್ರ ಸಂಪೂರ್ಣ ತೊಂದರೆಗೆ ಸಿಲುಕಿದೆ. ಯುವಕರು ನಿರುದ್ಯೋಗದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಗತ್ಯವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದೆ. ಆದುದರಿಂದ ಭಾರತ ಭವಿಷ್ಯವನ್ನು ರೂಪಿಸಲು ಮಾಯಾವತಿ ಸರಕಾರ ದಿಂದ ಮಾತ್ರ ಸಾಧ್ಯ ಎಂದರು.
ಮಾಯಾವತಿ ಸರಕಾರ ಅಧಿಕಾರಕ್ಕೆ ಬಂದಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರ ವ್ಯಾಪ್ತಿಗೆ ಬರುವ ಕರಾವಳಿ, ಮಲೆನಾಡು, ಬಯಲು ಸೀಮೆ ಪ್ರದೇಶದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು. ಬಡ ಕುಟುಂಬದ ಒಬ್ಬ ಸದಸ್ಯನಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಸುದ್ದಿಗೋಷ್ಟಿಯಲ್ಲಿ ರಾಜ್ಯ ಮುಖಂಡರಾದ ಜಾಕೀರ್ ಹುಸೇನ್, ಪಿ.ವೇಲಾಯುದನ್, ಬಿಎಸ್ಪಿ ಉಡುಪಿ ಜಿಲ್ಲಾಧ್ಯಕ್ಷ ಉದಯ ಕುಮಾರ್ ತಲ್ಲೂರು, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ತೊಟ್ಟಂ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಉಪಸ್ಥಿತರಿದ್ದರು.