ಕೊಯಿಲ: ಗೃಹಪ್ರವೇಶ ಕಾರ್ಯಕ್ರಮಕ್ಕೆ ಚುನಾವಣಾ ಸ್ಕ್ವಾಡ್ ದಾಳಿ-ಪರಿಶೀಲನೆ
ಪಕ್ಷದ ಕಾರ್ಯಕರ್ತರಿಗೆ ಬಾಡೂಟದ ಆರೋಪ
ಬಂಟ್ವಾಳ, ಎ. 13: ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಕ್ವಾರ್ಟರ್ಸ್ ಎಂಬಲ್ಲಿ ಗೃಹಪ್ರವೇಶ ಕಾರ್ಯಕ್ರಮ ನಡೆಯುತ್ತಿರುವ ಮನೆ ಪಕ್ಕದಲ್ಲಿ ರಾಜಕೀಯ ಪಕ್ಷವೊಂದರ ಕಾರ್ಯಕರ್ತರಿಗೆ ಬಾಡೂಟ ನೀಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಆಗಮಿಸಿ ಪರಿಶೀಲನೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.
ಇಲ್ಲಿನ ನಿವಾಸಿ ದಿ. ಕೊರಗಪ್ಪ ಪೂಜಾರಿ ಎಂಬವರ ಪತ್ನಿ ದೇವಕಿ ಎಂಬವರು ತನ್ನ ಪುತ್ರ ಖರೀದಿಸಿದ ಐದು ಸೆಂಟ್ಸ್ ಜಮೀನಿನಲ್ಲಿ ನೂತನ ಮನೆ ನಿರ್ಮಿಸಿ ಗೃಹಪ್ರವೇಶ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ನಡೆಸಿದ್ದಾರೆ. ಇವರ ಮನೆಗೆ ಮಧ್ಯಾಹ್ನ ಬಂಟ್ವಾಳ ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಅವರು ಬಂದು ಹೋದ ಕೂಡಲೇ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಆಗಮಿಸಿದೆ.
ಇಲ್ಲಿನ ಕಿರಿದಾದ ಅಂಗಳದಲ್ಲಿ ಸ್ಥಳಾವಕಾಶ ಇಲ್ಲದ ಕಾರಣ ಪಕ್ಕದ ಮನೆಯ ಅಂಗಳದಲ್ಲಿ ಸಸ್ಯಾಹಾರ ಅಡುಗೆ ಸಿದ್ಧಪಡಿಸಿ ಹೊಸ ಮನೆಯ ಅಂಗಳದಲ್ಲಿ ಊಟೋಪಚಾರ ನೀಡಲಾಗಿತ್ತು. ಆದರೆ, ಇಲ್ಲಿನ ಗೃಹಪ್ರವೇಶದ ಸಮೀಪದ ಮನೆಯಲ್ಲಿ ರಾಜಕೀಯ ಪಕ್ಷವೊಂದರ ಕಾರ್ಯಕರ್ತರಿಗೆ ಬಾಡೂಟ ನೀಡಲಾಗುತ್ತಿದೆ ಎಂದು ಆರೋಪಿಸಿ ಚುನಾವಣಾ ಅಧಿಕಾರಿಗಳಿಗೆ ವ್ಯಕ್ತಿಯೊಬ್ಬರು ಮಾಹಿತಿ ನೀಡಿದ್ದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಈ ಪ್ರದೇಶದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಯಾವುದೇ ರೀತಿಯ ಬಾಡೂಟ ನೀಡಿರುವುದು ಕಂಡು ಬಂದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.