ದ.ಕ.ಜಿಲ್ಲಾ ಮಟ್ಟದ ಅಂಬೇಡ್ಕರ್ ಜಯಂತಿ ಆಚರಣೆ
ಮಂಗಳೂರು, ಎ.14: ಮಹಾನ್ ಮಾನವತಾವಾದಿಯಾಗಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂವಿಧಾನವನ್ನು ನೀಡಿ ಸಮ -ಸಮಾಜ ನಿರ್ಮಾಣಕ್ಕೆ ಕಾರಣಕರ್ತರಾಗಿದ್ದರು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದರು.
ನಗರದ ಪುರಭವನದ ಆವರಣದಲ್ಲಿ ದ.ಕ. ಜಿಲ್ಲಾಡಳಿತದ ವತಿಯಿಂದ ರವಿವಾರ ಆಯೋಜಿಸಲಾದ 128ನೇ ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಅಂಬೇಡ್ಕರ್ರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಎಲ್ಲಾ ವೈಯಕ್ತಿಕ ಮತ್ತು ಸಾಮೂಹಿಕ ಚಟುವಟಿಕೆಗಳಲ್ಲಿ ಉನ್ನತಿಯನ್ನು ಸಾಧಿಸಲು ಪ್ರಯತ್ನಿಸಿ ದೇಶದ ಪ್ರಗತಿಗಾಗಿ ಶ್ರಮಿಸುವುದು ಪ್ರತಿಯೊಬ್ಬ ಭಾರತೀಯನ ಸಂವಿಧಾನ ಬದ್ಧ ಮೂಲಭೂತ ಕರ್ತವ್ಯ ಎಂಬುದನ್ನು ಆಚರಣೆಯ ಮೂಲಕ ಮಾಡಿ ತೋರಿಸಿದ ಮಹಾನ್ ಚೇತನ ಅಂಬೇಡ್ಕರ್ ನೀಡಿದ ಸಂವಿಧಾನದ ಸ್ಫೂರ್ತಿಯನ್ನು ಎತ್ತಿ ಹಿಡಿಯುವ ಮುಖಾಂತರ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಕರೆ ನೀಡಿದರು.
ಪಶ್ಚಿಮವಲಯ ಐಜಿಪಿ ಅರುಣ್ ಚಕ್ರವರ್ತಿ ಮಾತನಾಡಿ ಅಂಬೇಡ್ಕರ್ ಭಾರತದ ಭಾಗ್ಯವಿಧಾತ. ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಿದ ದೇಶ ಇಂದು ಅಭಿವೃದ್ಧಿಯ ಪಥದಲ್ಲಿ ಸಾಗಲು ಮೂಲ ಕಾರಣ ಅಂಬೇಡ್ಕರ್ ಅವರು ನಮಗೆ ನೀಡಿದ ಸಂವಿಧಾನವಾಗಿದೆ ಎಂದರು.
ಸ್ವಾತಂತ್ರ್ಯ ಪೂರ್ವ ಹಾಗೂ ನಂತರದ ದೇಶದ ಇತಿಹಾಸವನ್ನು ಅವಲೋಕಿಸಿದರೆ ಸಂವಿಧಾನ ರೂಪಿಸಿದವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಹಲವು ಸವಾಲುಗಳನ್ನು ಎದುರಿಸಿ ಜಯಿಸಿ ಮುನ್ನಡೆಯಲು ಸಾಧ್ಯವಾಗಿದೆ ಎಂಬುದನ್ನು ಹೇಳಲು ಯಾವುದೇ ಹಿಂಜರಿಕೆ ಇಲ್ಲ ಎಂದು ಅರುಣ್ ಚಕ್ರವರ್ತಿ ಹೇಳಿರು.
ದ.ಕ.ಜಿಪಂ ಸಿಇಒ ಡಾ ಸೆಲ್ವಮಣಿ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್, ಕಮಿಷನರ್ ಸಂದೀಪ್ ಪಾಟೀಲ್, ಡಿಸಿಪಿ ಹನುಮಂತರಾಯ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕ ವೇದಮೂರ್ತಿ, ಮಹಾನಗರಪಾಲಿಕೆ ಆಯುಕ್ತ ಬಿ. ಎಚ್ ನಾರಾಯಣಪ್ಪ, ತಹಶೀಲ್ದಾರ್ ಗುರುಪ್ರಸಾದ್, ಎಸಿಪಿ ಸುಧೀರ್ ಹೆಗ್ಡೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.