ಮಂಗಳೂರು ವಿವಿ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಮಂಗಳೂರು, ಎ.17:ಮಂಗಳೂರು ವಿವಿ ಸಂಧ್ಯಾ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಭಾಗ್ಯವಂತರು. ಕೆಲಸದ ಜೊತೆಗೆ ತಮ್ಮ ಪದವಿ ಪೂರೈಸಲು ಮಂಗಳೂರು ವಿವಿ ನೀಡಿದ ಅವಕಾಶವನ್ನು ಬಳಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಮಂಗಳೂರು ವಿವಿ ಹಣಕಾಸು ಅಧಿಕಾರಿ ಡಾ.ದಯಾನಂದ ನಾಯ್ಕಿ ಹೇಳಿದರು.
ಮಂಗಳೂರು ವಿವಿ ಸಂಧ್ಯಾ ಕಾಲೇಜು ತನ್ನ ಪ್ರಥಮ ಬ್ಯಾಚಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಸೋಮವಾರ ಏರ್ಪಡಿಸಿದ ಬೀಳ್ಗೊಡುಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಎ.ಸಿದ್ದೀಕ್ ಮಾತನಾಡಿ, ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಿಗೂ ಭಾವನೆಗಳಿವೆ. ಇತರ ವಿದ್ಯಾರ್ಥಿಗಳಿಗೆ ಹೋಲಿಕೆ ಮಾಡಿದಾಗ ಈ ವಿದ್ಯಾರ್ಥಿಗಳಿಗೆ ಹೆಚ್ಚು ಜವಾಬ್ದಾರಿ ಇದೆ. ಸಂಧ್ಯಾ ಕಾಲೇಜಿನ ಅಳಿವು ಉಳಿವಿನ ಜವಾಬ್ದಾರಿ ಕೂಡ ಈ ವಿದ್ಯಾರ್ಥಿಗಳ ಮೇಲಿದೆ ಆದ್ದರಿಂದ ಈ ವಿದ್ಯಾರ್ಥಿಗಳು ಕಾಲೇಜಿನ ರಾಯಭಾರಿಗಳಾಗಿದ್ದಾರೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ರಾಮಕೃಷ್ಣ ಬಿ.ಎಂ. ಮಾತನಾಡಿದರು.
ಈ ಸಂದರ್ಭ ಕಾಲೇಜಿಗೆ ವಿದಾಯ ಕೋರುತ್ತಿರುವ ಅಂತಿಮ ವರ್ಷದ ವಿದ್ಯಾರ್ಥಿಗಳು ಕಾಲೇಜಿನ ಗ್ರಂಥಾಲಯದಲ್ಲಿ ಸಾಕಷ್ಟು ಪ್ರಮಾಣದ ಪುಸ್ತಕಗಳ ಕೊರತೆ ಇರುವುದನ್ನು ಮನಗಂಡು ಗ್ರಂಥಾಲಯಕ್ಕೆ ಪುಸ್ತಕ ಖರೀದಿಗಾಗಿ ಧನಸಹಾಯ ನೀಡಿದರು.