ಬೈಂದೂರು: ಶಾಸಕರು ಸಹಿತ ಗಣ್ಯರಿಂದ ಮತದಾನ
ಬೈಂದೂರು, ಎ.23: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಜಿಲ್ಲೆಯ ಬೈಂದೂರು ವಿಧಾನ ಸಭಾಕ್ಷೇತ್ರದಲ್ಲಿ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಮತದಾನ ಮಾಡಿದರು.
ಶಾಸಕ ಸುಕುಮಾರ್ ಶೆಟ್ಟಿ ಬೆಳ್ಳಾಲದ ಮೂಡುಮಂದ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಗಟ್ಟೆ ಸಂಖ್ಯೆ 144ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ದೇಶದ ಸಮಗ್ರ ಅಭಿವೃದ್ಧಿ ಹಾಗೂ ರಕ್ಷಣೆಗಾಗಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು. ಎಲ್ಲ ಮತಗಟ್ಟೆಗಳಿಗೆ ಭೇಟಿ ನೀಡಿದ್ದೇನೆ. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರ ಗೆಲುವು ನನ್ನ ಗೆಲುವು ಎಂಬಂತೆ ಹೋರಾಟ ಮಾಡುತ್ತಿದ್ದೇನೆ ಎಂದರು.
ಮಾಜಿ ಶಾಸಕ ಗೋಪಾಲ ಪೂಜಾರಿ ಹಟ್ಟಿಯಂಗಡಿ ಗ್ರಾಮ ಪಂಚಾ ಯತ್ನ ಕನ್ಯಾನ ಮತಗಟ್ಟೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು. ಈ ಬಾರಿಯ ಒಳ್ಳೆಯ ವಾತಾರವಣ ಇದ್ದು, ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಗೆಲವು ಸಾಧಿಸಲಿದ್ದಾರೆ ಎಂದು ಗೋಪಾಲ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಶಾಸಕ, ರಾಜ್ಯ ಮೂರನೆ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ. ಕೊಡ್ಗಿ ಅಮಾಸೆಬೈಲು ಗ್ರಾಪಂ ವ್ಯಾಪ್ತಿಯ ಮಚ್ಚಟ್ಟು ಮತಗಟ್ಟೆಯಲ್ಲಿ ಮತದಾನ ಮಾಡಿದರು.