ಉಡುಪಿ: ನೀರಿನ ಪರ್ಯಾಯ ವ್ಯವಸ್ಥೆಗೆ ಜನಪ್ರತಿನಿಧಿಗಳ ಆಗ್ರಹ
ಉಡುಪಿ, ಎ.26: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸದ್ಯ ದಿನನಿತ್ಯದ ಉಪಯೋಗಕ್ಕೂ ಕೂಡ ನೀರಿನ ಸಮಸ್ಯೆ ಎದುರಾಗಿದ್ದು, ನಗರಾಡಳಿತ ಕೂಡಲೇ ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಕೆ.ರಘುಪತಿ ಭಟ್ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಸಂದರ್ಭ ಬಜೆ ಅಣೆಕಟ್ಟಿನಲ್ಲಿರುವ ನೀರಿನ ಸಂಗ್ರಹದ ಕುರಿತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ ಶಾಸಕರು, ಬಜೆ ಅಣೆಕಟ್ಟು ಸಂಪೂರ್ಣ ಬತ್ತಿ ಹೋಗಿದೆ. ಜರು ನೀರಿಲ್ಲದೆ ಪರದಾಡುವಂತಾಗಿದೆ. ನಗರಾಡಳಿತ ಇದಕ್ಕೆ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಬೇಕು ಮತ್ತು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಆಗ್ರಹಿಸಿದರು.
ಬಜೆಯಲ್ಲಿ ಕೂಡ ನೀರಿನ ಸಮಸ್ಯೆ ಎದುರಾಗಿದ್ದು. ಇದಕ್ಕೆ ನಗರಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು,ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ನಗರಾಡಳಿತದ ಮೂಲಕ ಕ್ರಮಕೈಗೊಳ್ಳಬೇಕು, ಜನರಿಗೆ ಅನುಕೂಲವಾಗುವಂತೆ ನಗರಾಳಿತ ನೋಡಿಕೊಳ್ಳಬೇಕು ಎಂದರು.
ಜನಪ್ರತಿನಿಧಿಗಳ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಚುನಾಯಿತ ನಗರಸಭಾ ಸದಸ್ಯರು ಕೂಡ ಜೊತೆಗಿದ್ದರು.
ನದಿ ಹೂಳೆತ್ತಲು ಒತ್ತಾಯ: ಜಿಲ್ಲೆಯಲ್ಲಿ ಒಂದೆಡೆ ಬಿಸಿಲಿನ ತಾಪ ಹೆಚ್ಚುತಿದ್ದರೆ, ಮತ್ತೊಂದೆಡೆ ತೀವ್ರತರ ನೀರಿನ ಸಮಸ್ಯೆ ಜನರನ್ನು ಬಾಧಿಸುತ್ತಿದೆ. ಸ್ವರ್ಣ ನದಿಯಲ್ಲಿ ವಾರಕ್ಕಾಗುವಷ್ಟು ಸಹ ನೀರಿಲ್ಲ. ಅಲ್ಲದೇ ನದಿಯಲ್ಲಿ ಹೂಳು ತುಂಬಿಕೊಂಡಿದ್ದು ನಗರಾಡಳಿತ ಈ ಬಗ್ಗೆ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ವರ್ಷ ಕೂಡ ನೀರಿನ ಸಮಸ್ಯೆ ಎದುರಾಗಬಹುದು ಎಂದು ರಘುಪತಿ ಭಟ್ ಹೇಳಿದ್ದಾರೆ.
ನದಿಯಲ್ಲಿ ನೀರು ಶೇಖರಣೆಯಾಗಬೇಕಾದರೆ ಇನ್ನಾದರೂ ಹೂಳೆತ್ತುವ ಕಾರ್ಯ ನಡೆಯಬೇಕು. ಬಂಡೆಕಲ್ಲುಗಳನ್ನು ತೆರವುಗೊಳಿಸಿ ಮಳೆಗಾಲದಲ್ಲಿ ನೀರು ಶೇಖರಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ಜನರು ಕೂಡ ನೀರನ್ನು ಬೇಕಾಬಿಟ್ಟಿ ಉಪಯೋಗಿಸಿ ಹಾಳು ಮಾಡದೆ ನೀರಿನ ಸದ್ಭಳಕೆ ಮಾಡಬೇಕು ಎಂದರು.
ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.