ಜಿಲ್ಲೆಯ ಸಾರ್ವಜನಿಕರಿಗೆ ಸುಗಮವಾಗಿ ಮರಳು ಪೂರೈಸಿ: ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಉಡುಪಿ, ಎ.27: ಉಡುಪಿ ಜಿಲ್ಲೆಯ ಸಾರ್ವಜನಿಕರಿಗೆ ಸುಗಮವಾಗಿ ಮರಳು ಸಿಗಲು ಯಾವುದೇ ತೊಂದರೆಯಾಗದಂತೆ ಗಮನ ಹರಿಸುವಂತೆ ರಾಜ್ಯ ಸರಕಾರದ ವಾಣಿಜ್ಯ ಇಲಾಖೆ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದಶಿರ್ ಎಂ.ಮಹೇಶ್ವರ ರಾವ್ ತಿಳಿಸಿದ್ದಾರೆ.
ಶನಿವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಬರ ಪರಿಸ್ಥಿತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಈಗಾಗಲೇ ಕೆಆರ್ಐಡಿಎಲ್ ಮೂಲಕ ಜಿಲ್ಲೆಯ ನಾನ್ ಸಿಆರ್ಝಡ್ ವಲಯದಲ್ಲಿ 2 ಬ್ಲಾಕ್ಗಳಿಂದ ಸಾರ್ವಜನಿಕರಿಗೆ ಮರಳು ಪೂರೈಸಲಾಗುತ್ತಿದೆ. ಕಳೆದ 2 ತಿಂಗಳುಗಳಲ್ಲಿ 23,854 ಮೆಟ್ರಿಕ್ ಟನ್ ಮರಳಿಗೆ ಸಾರ್ವಜನಿಕರಿಂದ ಬೇಡಿಕೆ ಬಂದಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ಗೆ ಹಂಚಿಕೆಯಾಗಿರುವ 3 ಮರಳು ಬ್ಲಾಕ್ಗಳಿಂದ ಮರಳು ತೆಗೆಯಲು ಕೂಡಲೆ ಟೆಂಡರ್ ಕರೆಯಲು ಅವರು ಜಿಪಂ ಅಧಿಕಾರಿ ಗಳಿಗೆ ಸೂಚಿಸಿದರು. ಡ್ರೆಜ್ಜಿಂಗ್ ಮೂಲಕ ತೆಗೆದಿರುವ ಮರಳನ್ನು ವಿಲೇವಾರಿ ಮಾಡುವ ಸಂಬಂಧ ಕೂಡಲೆ ನಿರ್ಧಾರ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಕಾಯದರ್ಶಿ ಸೂಚಿಸಿದರು.
ಕಳೆದ ವರ್ಷ ಪ್ರಾಕೃತಿಕ ವಿಕೋಪದಿಂದ ಹಾನಿಯಾಗಿರುವ ಗ್ರಾಮಾಂತರ ಪ್ರದೇಶಗಳ ರಸ್ತೆಗಳ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಕುಂಠಿತವಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಬಗ್ಗೆ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು.
ಜಿಲ್ಲೆಯ ನಗರ ಪಟ್ಟಣ ಪ್ರದೇಶಗಳಲ್ಲಿ ಯುಜಿಡಿ ಒಳಚರಂಡಿ ಕಾಮಗಾರಿ ಸಂಬಂಧ ಪ್ರಕ್ರಿಯೆಗಳನ್ನು ತ್ವರಿತಗೊಳಿಸಬೇಕು ಎಂದೂ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಭೂನ್ಯಾಯ ಮಂಡಳಿಗಳ ಮುಂದೆ ಸಾಕಷ್ಟು ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದ್ದು, ಈ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲು ಮಹೇಶ್ವರ್ ರಾವ್ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.