ಸಾಮಾನ್ಯ ಪ್ರವೇಶ ಪರೀಕ್ಷೆ; ಪೂರ್ವಭಾವಿ ಸಿದ್ಧತೆ ಸಭೆ
ಉಡುಪಿ, ಎ.27: ಎ.29 ಮತ್ತು 30ರಂದು ಜಿಲ್ಲೆಯಲ್ಲಿ ನಡೆಯಲಿರುವ 2019ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ ಬಗ್ಗೆ ಕೈಗೊಳ್ಳಲಾದ ಪೂರ್ವಭಾವಿ ಸಿದ್ಧತೆಗಳ ಕುರಿತು ಸಭೆ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆಯಿತು.
ಸಾಮಾನ್ಯ ಪ್ರವೇಶ ಪರೀಕ್ಷೆ ಪರಿಣಾಮಕಾರಿ ಹಾಗೂ ಲೋಪರಹಿತವಾಗಿ ನಡೆಸಲು ಎಲ್ಲಾ ಕ್ರಮಕೈಗೊಳ್ಳುವಂತೆ ತಿಳಿಸಿದ ಅಪರ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆಯಲ್ಲಿ ಒಟ್ಟು 11-ಉಡುಪಿ ತಾಲೂಕಿನ 6, ಕುಂದಾಪುರ ತಾಲೂಕಿನ 3 ಮತ್ತು ಕಾರ್ಕಳ ತಾಲೂಕಿನ 2- ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಜಿಲ್ಲೆಯಿಂದ ಪರೀಕ್ಷೆಗೆ ಒಟ್ಟು 4769 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಪರೀಕ್ಷೆಗಳ ಪ್ರಶ್ನೆಪತ್ರಿಕೆಯನ್ನು ಉಡುಪಿ ಜಿಲ್ಲಾ ಖಜಾನೆಯಿಂದ ಸಂಬಂಧ ಪಟ್ಟ ಪರೀಕ್ಷಾ ಕೇಂದ್ರಗಳಿಗೆ ತೆಗೆದುಕೊಂಡು ಹೋಗಲು ತಾಲೂಕಿನ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪ್ರಾಂಶುಪಾಲರೊಳಗೊಂಡ ತ್ರಿಸದಸ್ಯ ಸಮಿತಿಯನ್ನು ರಚಿಸಿರುವುದಾಗಿ ತಿಳಿಸಿದರು.
ಪರೀಕ್ಷೆಗಳು ಬೆಳಗ್ಗೆ ಮತ್ತು ಅಪರಾಹ್ನ ನಡೆಯಲಿರುವುದರಿಂದ ಜಿಲ್ಲಾ ಖಜಾನೆಯಿಂದ ಆಯಾ ಸಮಯಕ್ಕೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಖಜಾನೆಯ ಉಪ ನಿರ್ದೇಶಕರಿಗೆ ಸೂಚಿಸಿದರು. ಅಲ್ಲದೇ ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಜಿಲ್ಲಾ ಪೋಲೀಸ್ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳ ತಹಶೀಲ್ದಾರರು ಜಿಪಿಎಸ್ ಅಳವಡಿಸಿದ ವಾಹನಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ತಿಳಿಸಿದರು. ಕುಂದಾಪುರ ಮತ್ತು ಕಾರ್ಕಳ ತಾಲೂಕಿನ ಪರೀಕ್ಷಾ ಕೇಂದ್ರಗಳಿಗೆ ಅಪರಾಹ್ನ ನೀಡುವ ಪ್ರಶ್ನೆ ಪತ್ರಿಕೆಗಳನ್ನು ತ್ರಿಸದಸ್ಯ ಸಮಿತಿ ಅಧಿಕಾರಿಗಳು, ಮೊಹರ್ ಮಾಡಿ ದಾಖಲೆ ಸಹಿತವಾಗಿ ದ್ರವಾಗಿ ತಾಲೂಕು ಖಜಾನೆಗಳಲ್ಲಿ ಇರಿಸುವ ವ್ಯವಸ್ಥೆ ಮಾಡುವಂತೆಯೂ ಅವರು ತಿಳಿಸಿದರು.
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೋಲೀಸ್ ಬಂದೋಬಸ್ತ್ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ, ಪೋಲಿಸ್ ಉಪ ಅಧಿಕ್ಷಕರು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಜಿಲ್ಲಾ ಪದವಿ ಪೂರ್ವಶಿಕ್ಷಣ ಇಲಾಖೆ ಉಪನಿರ್ದೇಶಕರು ಸ್ವಾಗತಿಸಿದರು.