ಮಾಧ್ಯಮಗಳ ಜವಾಬ್ದಾರಿಯುತ ಸೇವೆಯಿಂದ ಸಮಾಜ ಸ್ವಸ್ಥ: ಡಾ.ಸೆಲ್ವಮಣಿ
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಯಕಾರಿ ಸಮಿತಿ ಸಭೆ
ಮಂಗಳೂರು, ಎ.29: ದೃಶ್ಯ, ಮುದ್ರಣ, ಸಾಮಾಜಿಕ ಜಾಲತಾಣಗಳು ಸೇರಿದಂತೆ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ಅರಿತು ಸೇವೆ ನೀಡಿದಾಗ ಸಮಾಜ ಸ್ವಸ್ಥವಾಗಿರುತ್ತದೆ ಎಂದ ದ.ಕ. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಆರ್. ಅಭಿಪ್ರಾಯಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಇಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಒಂದೇ ಕಡೆಯಲ್ಲಿ ನಡೆಯುವ ಬದಲು ವಿವಿಧ ಜಿಲ್ಲೆಗಳಲ್ಲಿ ನಡೆದಾಗ ಅಲ್ಲಿನ ವಿಶೇಷತೆಗಳು, ಅಲ್ಲಿನ ಮಾದರಿ ಕೆಲಸಗಳನ್ನು ಅರಿತುಕೊಂಡು ಇತರ ಕಡೆಗಳಲ್ಲಿ ಅಳವಡಿಸುವುದರ ಜತೆಗೆ ಅಲ್ಲಿನ ಸಮಸ್ಯೆಗಳನ್ನು ಕೂಡಾ ಸ್ಥೂಲವಾಗಿ ಅರಿಯಲು ಸಾಧ್ಯ ಎಂದು ಅವರು ಅಭಿಪ್ರಾಯಿಸಿದರು.
ಅಧ್ಯಕ್ಷತೆ ವಹಿಸಿದ್ದ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ರಾಜ್ಯ ಪತ್ರಕರ್ತರ ಸಂಘವು ಡಿ.ವಿ.ಗುಂಡಪ್ಪರಿಂದ 1932ರಲ್ಲಿ ಹುಟ್ಟು ಹಾಕಲ್ಪಟ್ಟ ಸಂಘವಾಗಿದ್ದು, ದೇಶದ ಉತ್ತಮ ಸಂಘ ಎಂಬ ಹೆಗ್ಗಳಿಕೆಯನ್ನೂ ಹೊಂದಿದೆ ಎಂದರು.
ದ.ಕ. ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಕರ್ತರು ಹಾಗೂ ಕುಟುಂಬದವರಿಗೆ ನಡೆಸಲಾಗುತ್ತಿರುವ ಆರೋಗ್ಯ ತಪಾಸಣೆ ಮಾದರಿ ಕಾರ್ಯಕ್ರಮವಾಗಿ ಕಂಡುಬಂದಿದ್ದು, ಇಲ್ಲಿನ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಸಂಘದ ಜತೆ ಬದ್ಧತೆ ಕಾಣುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಹೊಸದಿಲ್ಲಿಯ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು, ಅವರನ್ನು ದ.ಕ. ಜಿಲ್ಲಾ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಸ್ವಾಗತಿಸಿದರು. ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ವೇದಿಕೆಯಲ್ಲಿ ರಾಜ್ಯ ಸಂಘದ ಉಪಾಧ್ಯಕ್ಷ ಮತ್ತಿಕೆರೆ ಜಯರಾಮ, ಪುಂಡಲೀಕ ಬಾಳೋಜ, ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಕಾರ್ಯದರ್ಶಿ ಸಂಜೀವ ರಾವ್ ಬಿ. ಕುಲಕರ್ಣಿ, ಕೋಶಾಧಿಕಾರಿ ಡಾ. ಕೆ. ಉಮೇಶ್ವರ, ಎಚ್.ಬಿ. ಮದನಗೌಡ ಮೊದಲಾದವರು ಉಪಸ್ಥಿತರಿದ್ದರು.
ರಾಜ್ಯದ ವಿವಿಧ ಜಿಲ್ಲೆಗಳ 80ಕ್ಕೂ ಅಧಿಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.