ಮನಪಾ ವ್ಯಾಪ್ತಿಯಲ್ಲಿ ನಿರಂತರ ನೀರು ಪೂರೈಕೆಯ ಎಡಿಬಿ ಯೋಜನೆ ವಿಫಲ -ವೇದವ್ಯಾಸ ಕಾಮತ್
ಮಂಗಳೂರು, ಎ. 29: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 160 ಕೋಟಿ ರೂ. ಎಡಿಬಿ ಯೋಜನೆಯ ಮೂಲಕ 24 ಗಂಟೆಯೂ ನೀರು ಪೂರೈಕೆಯಾಗ ಬೇಕಾಗಿತ್ತು. ಆದರೆ ಈ ಯೋಜನೆಯ ಅನುಷ್ಠಾನಗೊಳಿಸುವಲ್ಲಿ ಹಿಂದಿನ ಶಾಸಕರು ವಿಫಲರಾಗಿದ್ದಾರೆ. ಎಡಿಬಿ ಎರಡನೆ ಯೋಜನೆ ಅನುಷ್ಠಾನಗೊಳಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ (ಥರ್ಡ್ ಪಾರ್ಟಿ )ಪ್ರತ್ಯೇಕವಾಗಿ ಪರಿಶೀಲನೆ ನಡೆಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ತುಂಬೆ ಕಿಂಡಿ ಅಣೆಕಟ್ಟಿನಲ್ಲಿ 7 ಮೀಟರ್ ಎತ್ತರವಿದ್ದರೂ ಪೂರ್ಣಪ್ರಮಾಣದಲ್ಲಿ ನೀರು ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ ಎಂದು ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಕೇಂದ್ರ ಸರಕಾರದ ಅಮೃತ್ ಯೋಜನೆಯ ಮೂಲಕ ನಗರಕ್ಕೆ 35.51ಕೋಟಿ ರೂ ಮಂಜೂರಾಗಿದೆ.ಈ ಯೋಜನೆಯ ಮೂಲಕ ಕುಡಿಯುವ ನೀರು ಯೋಜನೆಯನ್ನು ಪೂರ್ಣಗೊಳಿಸಲು ಹಿಂದಿನ ಶಾಸಕರು ವಿಫಲರಾಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ನೀರಿನ ವಿತರಣೆಯ ಸಮಸ್ಯೆ ಇದೆ. ಎತ್ತರ ಪ್ರದೇಶಗಳಿಗೆ ಮಳೆಗಾಲದಲ್ಲೂ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಮನಪಾ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ನೀರು ಪೂರೈಕೆಗೆ ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿರುವುದಾಗಿ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮನಪಾ ಸದಸ್ಯ ಪ್ರೇಮಾನಂದ ಶೆಟ್ಟಿ ಬಿಜೆಪಿ ಮುಖಂಡರಾದ ರವಿಶಂಕರ ಮಿಜಾರ್, ರಾಮಅಜಿಲ, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.