ಸೇಡಿನ ರಾಜಕಾರಣ ಮಾಡಲ್ಲ: ಯಡಿಯೂರಪ್ಪ
ಬೆಂಗಳೂರು, ಜು.26: ಸೇಡಿನ ರಾಜಕಾರಣ ಮಾಡಲ್ಲ, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಆಡಳಿತವನ್ನು ನೀಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶುಕ್ರವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಆರೂವರೆ ಕೋಟಿ ಜನರ ಅಪೇಕ್ಷೆಯಂತೆ ಹಿಂದಿನ ಸರಕಾರ ಹೋಗಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಿದೆ ಎಂದರು.
ಕಳೆದ ಒಂದು ವರ್ಷದಿಂದ ಚಾತಕ ಪಕ್ಷಿಯಂತೆ ಜನ ಕಾಯುತ್ತಿದ್ದರು. ರಾಜ್ಯದ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿ, ಭ್ರಷ್ಟಾಚಾರ ತಾಂಡವವಾಡುತ್ತಿತ್ತು. ಜನ ಹಿತ ಮರೆತು ತುಘಲಕ್ ದರ್ಬಾರ್ ಮಾಡುತ್ತಿದ್ದ ಸರಕಾರದ ಆಡಳಿತ ಕೊನೆಯಾಗಿದೆ ಎಂದು ಯಡಿಯೂರಪ್ಪ ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯ ಆಶೀರ್ವಾದ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೆಳಗ್ಗೆ 8 ಗಂಟೆಗೆ ದೂರವಾಣಿ ಕರೆ ಮಾಡಿ ರಾಜ್ಯಪಾಲರನ್ನು ಭೇಟಿ ಮಾಡಿ, ಇವತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವಂತೆ ಸೂಚನೆ ನೀಡಿದರು. ಅದರಂತೆ, ನಾನು ರಾಜಭವನಕ್ಕೆ ಹೋಗಿ ರಾಜ್ಯಪಾಲರನ್ನು ಭೇಟಿಯಾದೆ, ಸಂಜೆ 6 ಗಂಟೆ ನಂತರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನೀಡಿದ್ದಾರೆ ಎಂದು ಅವರು ತಿಳಿಸಿದರು.
ನಮ್ಮ ಜವಾಬ್ದಾರಿ ಬಹಳ ದೊಡ್ಡದಿದೆ. ನಾಡಿನ ಅಪೇಕ್ಷೆಯು ಬಹಳ ದೊಡ್ಡದಿದೆ. ಒಂದು ಕಡೆ ಭೀಕರ ಬರಗಾಲ, ರೈತರು, ಮೀನುಗಾರರು, ಕಾರ್ಮಿಕರು, ನೇಕಾರರು, ಎಸ್ಸಿ-ಎಸ್ಟಿಗಳು ಸೇರಿದಂತೆ ಎಲ್ಲರ ಕಲ್ಯಾಣಕ್ಕೆ ಕೆಲಸ ಮಾಡಬೇಕಿದೆ. ರಾಜ್ಯದ ಜನರ ನಂಬಿಕೆ, ವಿಶ್ವಾಸಕ್ಕೆ ಧಕ್ಕೆ ಬರದಂತೆ, ಹಿಂದಿನ ಸರಕಾರಕ್ಕಿಂತ ಈ ಸರಕಾರದ ಆಡಳಿತ ಉತ್ತಮವಾಗಿದೆ ಎಂದು ಜನ ಮಾತನಾಡಿಕೊಳ್ಳುವಂತೆ ಆಡಳಿತ ನೀಡುತ್ತೇನೆ ಎಂದು ಯಡಿಯೂರಪ್ಪ ಭರವಸೆ ನೀಡಿದರು.