ಜಿಲ್ಲಾ ಪಂಚಾಯತ್ಗಳ ಅನುದಾನ ಶೀಘ್ರದಲ್ಲಿಯೇ ಹೆಚ್ಚಳ: ಸಿಎಂ ಭರವಸೆ
ಬೆಂಗಳೂರು, ಸೆ.23: ರಾಜ್ಯಾದ್ಯಂತ ಜಿಲ್ಲಾ ಪಂಚಾಯತ್ ಗಳಿಗೆ ನೀಡಲಾಗುತ್ತಿರುವ ಅನುದಾನವನ್ನು ಶೀಘ್ರದಲ್ಲಿಯೇ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಸೋಮವಾರ ನಗರದ ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾ ಪಂಚಾಯತ್ ಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನಿಯೋಗ ಭೇಟಿ ಸಂದರ್ಭದಲ್ಲಿ ಅನುದಾನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಪ್ರಸ್ತುತ ಸರಕಾರ ನೀಡುತ್ತಿರುವ ಅನುದಾನವನ್ನು ಬಳಸಿಕೊಂಡು ಸಮಗ್ರ ಅಭಿವೃದ್ಧಿ ಕಷ್ಟಸಾಧ್ಯವಾಗುತ್ತಿದೆ. ಆದುದರಿಂದಾಗಿ, ತಕ್ಷಣವೇ ಅನುದಾನವನ್ನು ಹೆಚ್ಚಳ ಮಾಡಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ರಾಜ್ಯದಲ್ಲಿ ಇತ್ತೀಚೆಗೆ ಪ್ರವಾಹ ಉಂಟಾಗಿದ್ದು, ಅನೇಕ ತಾಲೂಕು, ಜಿಲ್ಲೆಗಳು ಹಾನಿಗೊಳಗಾಗಿವೆ. ನೆರೆಯಿಂದಾಗಿ ಲಕ್ಷಾಂತರ ಜನರು ಮನೆ, ಮಠಗಳನ್ನು ಕಳೆದುಕೊಂಡಿದ್ದಾರೆ. ಬೆಳೆಗಳು ಸಂಪೂರ್ಣ ಹಾಳಾಗಿವೆ. ಈ ವೇಳೆ ಸಂತ್ರಸ್ತರಿಗೆ ಪರಿಹಾರ ಕಾರ್ಯ ಕೈಗೊಳ್ಳಬೇಕಾಗಿದೆ. ಆದುದರಿಂದಾಗಿ ತಕ್ಷಣವೇ ಹಣ ಬಿಡುಗಡೆ ಮಾಡಲು ಆಗುವುದಿಲ್ಲ. ನನಗೆ ಸ್ವಲ್ಪ ಸಮಯಾವಕಾಶ ನೀಡಿ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಗನ್ಮ್ಯಾನ್ ನೀಡುವಂತೆ ಬೇಡಿಕೆಯನ್ನಿಟ್ಟರು. ಇದಕ್ಕೆ ಕ್ಯಾರೆ ಎನ್ನದ ಸಿಎಂ ಯಡಿಯೂರಪ್ಪ, ಇದನ್ನು ಬಿಟ್ಟು ಬೇರೆ ವಿಷಯ ಹೇಳಿ ಎಂದರು. ಹಾಗೂ ಈ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷರು ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದರು.