ಅಧಿವೇಶನ ಮೊಟಕುಗೊಳಿಸಿ ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ಹಾಜರಾದ ಸಿಎಂ ಬಿಎಸ್ವೈ, ಡಿಸಿಎಂಗಳು
ಬೆಂಗಳೂರು, ಅ. 14: ನೆರೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವ ನೆಪದಲ್ಲಿ ವಿಧಾನ ಮಂಡಲ ಅಧಿವೇಶನ ಮೊಟಕುಗೊಳಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಡಾ.ಅಶ್ವಥ್ ನಾರಾಯಣ ಮಹಾರಾಷ್ಟ್ರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಅಥವಾ ನಾಡಿದ್ದು ಮಹಾರಾಷ್ಟ್ರ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರ ಮೂರು ದಿನ ಪ್ರಚಾರ ನಡೆಸಲಿದ್ದಾರೆಂದು ಗೊತ್ತಾಗಿದೆ. ಈಗಾಗಲೇ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಪ್ರಚಾರ ಕೈಗೊಂಡಿದ್ದರೆ, ಮತ್ತೊಬ್ಬ ಡಿಸಿಎಂ ಡಾ.ಅಶ್ವಥ್ ನಾರಾಯಣ ಮುಂಬೈನಲ್ಲಿ ಬಿಜೆಪಿ ಪರ ಮತಭೇಟೆಯಲ್ಲಿ ತೊಡಗಿದ್ದಾರೆ.
ಮಹಾರಾಷ್ಟ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತ ಸಮುದಾಯದವರಿದ್ದು, ಅವರನ್ನು ಸೆಳೆಯಲು ಮುಖ್ಯಮಂತ್ರಿ ಯಡಿಯೂರಪ್ಪ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದು, ಮಹಾರಾಷ್ಟ್ರದ ವಿವಿಧೆಡೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರ ಪ್ರಚಾರ ಕೈಗೊಳ್ಳಲಿದ್ದಾರೆಂದು ತಿಳಿದು ಬಂದಿದೆ.
ಮಹಾರಾಷ್ಟ್ರದ 13 ಜಿಲ್ಲೆಗಳಲ್ಲಿ ಲಿಂಗಾಯತ ಮತದಾರರ ಪ್ರಾಬಲ್ಯ ಹೆಚ್ಚಿದ್ದು, ಲಿಂಗಾಯತರೇ ನಿರ್ಣಾಯಕ. 1.20ಕೋಟಿ ಲಿಂಗಾಯತ ಮತದಾರರಿದ್ದಾರೆ. ಹೀಗಾಗಿ ಬಿಜೆಪಿ ಲಿಂಗಾಯತರ ಮತಗಳನ್ನು ಸೆಳೆಯಲು ಬಿಎಸ್ವೈ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗುವ ಮುನ್ನ ಅನರ್ಹ ಶಾಸಕರಿಗೆ ಮುಂಬೈನಲ್ಲಿ ಆಶ್ರಯ ನೀಡಲಾಗಿತ್ತು. ಈ ನಿಟ್ಟಿನಲ್ಲಿ ಅಲ್ಲಿನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪರ ಚುನಾವಣೆಯಲ್ಲಿ ಸಿಎಂ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆಂದು ಹೇಳಲಾಗಿದೆ.
ಈಶ್ವರಪ್ಪ ಪ್ರವಾಸ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕುಟುಂಬ ಸಮೇತರಾಗಿ ಎರಡು ದಿನಗಳಿಂದ ತೆಲಂಗಾಣ ರಾಜ್ಯದ ಭದ್ರಚಲಂ ಪ್ರವಾಸದಲ್ಲಿದ್ದಾರೆಂದು ಮೂಲಗಳು ತಿಳಿಸಿವೆ.