ಕೇಂದ್ರ-ರಾಜ್ಯ ಸರಕಾರಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ರಾಜಭವನ ಮುತ್ತಿಗೆ ಯತ್ನ, ನಾಯಕರು ವಶಕ್ಕೆ
ಬೆಂಗಳೂರು, ಅ.23: ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿಗಳ ವಿರುದ್ಧ ರಾಜಭವನ ಮುತ್ತಿಗೆ ಯತ್ನ ನಡೆಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು, ವಾಹನದಲ್ಲಿ ಕರೆದೊಯ್ದರು.
ಬುಧವಾರ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಜಮಾಯಿಸಿದ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಕರ್ನಾಕಟದ ಹಿತ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ನೆರೆ ಪರಿಹಾರಕ್ಕಾಗಿ ಅನೇಕ ಬಾರಿ ಮನವಿ ಸಲ್ಲಿಸಿದರೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಉತ್ತರ ಕರ್ನಾಟಕ ಭಾಗದ ಜನರು ಕಷ್ಟಕರ ಸ್ಥಿತಿಯಲ್ಲಿದ್ದಾರೆ ಎಂದರು.
ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮಾತನಾಡಿ, ಐಟಿ, ಇಡಿ ಹಾಗೂ ಸಿಬಿಐ ಮೂಲಕ ಕಾಂಗ್ರೆಸ್ ನಾಯಕರಿಗೆ ಬೆದರಿಕೆ ಹಾಕುವ ಕೆಲಸ ಬಿಜೆಪಿ ಮಾಡುತ್ತಿದೆ. ಆದರೆ, ನಾವು ಇದಕ್ಕೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
ನಾವು ಭಿಕ್ಷಕರಲ್ಲ: ಕೇಂದ್ರ ಸರಕಾರ ಕರ್ನಾಟಕಕ್ಕೆ ಭಿಕ್ಷೆ ನೀಡುವ ಅಗತ್ಯ ಇಲ್ಲ. ನಾವು ಪಾವತಿ ಮಾಡಿರುವ ಕೋಟ್ಯಂತರ ರೂಪಾಯಿ ತೆರಿಗೆಯಲ್ಲಿಯೇ ನಮಗೆ ಅಧಿಕ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ ನಮ್ಮ ಹೋರಾಟ ತೀವ್ರಗೊಳಿಸಲಾಗುವುದೆಂದು ವಿಧಾನ ಪರಿಷತ್ ಸದಸ್ಯ ರಿಝ್ವನ್ ಆರ್ಶದ್ ಹೇಳಿದರು.
ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿ, ರಾಜ್ಯದಲ್ಲಿ ಸಂಕಷ್ಟ ಎದುರಾಗಿದ್ದು, ಕನ್ನಡಿಗರು ಇಂತಹ ಕರಾಳ ದಿನಗಳನ್ನು ಅನುಭವಿಸುತ್ತಿದ್ದಾರೆ. ಒಂದು ಕಡೆ ಬರ ಮತ್ತೊಂದು ನೆರೆ ಭಯ ಎದುರಾಗಿದೆ. ಇದನ್ನು ನೆನಸಿಕೊಂಡರೆ ಬಹಳ ನೋವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಶಾಸಕಿ ಸೌಮ್ಯ ರೆಡ್ಡಿ, ಮಾಜಿ ಸಂಸದ ಉಗ್ರಪ್ಪ, ಕಾಂಗ್ರೆಸ್ ಮುಖಂಡ ಸಲೀಂ ಅಹ್ಮದ್, ಬಸವನಗೌಡ ಬಾದರ್ಲಿ ಸೇರಿದಂತೆ ಪ್ರಮುಖರಿದ್ದರು.