ಕುಂದಾಪುರ ಫ್ಲೈಓವರ್ ಕಾಮಗಾರಿ ಶೀಘ್ರ ಮುಕ್ಕಾಯಕ್ಕೆ ಆಗ್ರಹಿಸಿ ಪತ್ರ ಚಳುವಳಿ
ಉಡುಪಿ, ಡಿ.22: ಅವಿಭಜಿತ ದ.ಕ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಪ್ಲೈಓವರ್ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಆಗ್ರಹಿಸಿ ಟೀಂ ಕುಂದಾಪುರಿಯನ್ಸ್ ಸಂಘಟನೆಯು ರವಿವಾರ ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ಪತ್ರ ಚಳವಳಿಯನ್ನು ಹಮ್ಮಿಕೊಂಡಿತು.
ಕಳೆದ 10 ವರ್ಷಗಳಿಂದ ಪೂರ್ಣಗೊಳ್ಳದೆ ಬಾಕಿ ಉಳಿದುಕೊಂಡಿರುವ ಕುಂದಾಪುರದ ರಾಷ್ಟ್ರೀಯ ಹೆದ್ದಾರಿ ಮತ್ತು ಫ್ಲೈ ಓವರ್ ಕಾಮಗಾರಿಯನ್ನು ಕೂಡಲೇ ಮುಕ್ತಾಯಗೊಳಿಸಬೇಕು. ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೆ ಚರಂಡಿ ನೀರು ರಸ್ತೆ ಮೇಲೆ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಕಾಮಗಾರಿ ವಿಳಂಬದಿಂದ ಸ್ಥಳೀಯರಿಗೆ ಹಲವಾರು ಸಮಸ್ಯೆಗಳಾಗುತ್ತಿದ್ದು, ಆದುದರಿಂದ ಮಾ.31ರ ಒಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಸಂಘಟನೆಯ ಸದಸ್ಯರು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಈ ಪತ್ರವನ್ನು ಉಡುಪಿ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆಯ ಶಾಸಕರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು, ಉಡುಪಿ-ಚಿಕ್ಕಮಗಳೂರು ಸಂಸದೆ, ಮುಖ್ಯಮಂತ್ರಿ ಗಳು ಮತ್ತು ಉಪ ಮುಖ್ಯಮಂತ್ರಿಗಳು, ಕೇಂದ್ರ ನಾಯಕರು ಮತ್ತು ಪ್ರಧಾನ ಮಂತ್ರಿಗಳು, ಕಾಮಗಾರಿ ವಹಿಸಿಕೊಂಡ ನವಯುಗ ಕಂಪೆನಿ ಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. ಇದರಲ್ಲಿ ಸಂಘಟನೆಯ ಎಲ್ಲ ಸದಸ್ಯರು ಪಾಲ್ಗೊಂಡಿದ್ದರು.