ಜ.26: ಅಖಿಲ ಭಾರತ ಕಾರ್ಮಿಕ ಸಂಘದಿಂದ ಪ್ರತಿಭಟನೆ
ಉಡುಪಿ, ಡಿ.27: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಕಾರ್ಮಿಕ ಸಂಘ ಉಡುಪಿ ಜಿಲ್ಲೆಯ ನೇತೃತ್ವದಲ್ಲಿ ಜ.26 ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಸಂಜೆ 4ಗಂಟೆಗೆ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ ಸ್ವಾಮಿ ಎಂ.ಎಚ್. ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಭಾರತೀಯ ಜನಔಷಧ ಕೇಂದ್ರದಲ್ಲಿ ಎಲ್ಲ ರೀತಿಯ ಔಷಧಿ ಗಳು ದೊರೆಯಬೇಕು. ಜನ ಔಷಧ ಕೇಂದ್ರದಲ್ಲಿರುವ ಕಾರ್ಮಿಕರಿಗೆ ಇಎಸ್ಐ, ಪಿಎಫ್, ಉದ್ಯೋಗ, ವೇತನ, ಆರೋಗ್ಯ, ವಾಸ್ತವ್ಯ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಸಹಕಾರಿ ಬ್ಯಾಂಕ್ಗಳು ಸಾಲಕ್ಕೆ ಸಂಬಂಧಿಸಿದಂತೆ ಜಾಮೀನುದಾರರಿಗೆ ಕಿರುಕುಳ ನೀಡುವ ಕೆಲಸ ಮಾಡಬಾರದು. ಸಹಕಾರಿ ಬ್ಯಾಂಕ್ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಇಎಸ್ಐ, ಪಿಎಫ್, ಉದ್ಯೋಗ, ವೇತನ, ಆರೋಗ್ಯ ಭದ್ರತೆಯನ್ನು ನೀಡಬೇಕು. ಈ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಮರೂರು, ಪ್ರಧಾನ ಕಾರ್ಯದರ್ಶಿ ಕೃಷ್ಣ ರಾವ್ ಆರೂರು, ದ.ಕ. ಜಿಲ್ಲಾಧ್ಯಕ್ಷ ಸಂತೋಷ್ ಕಾವೂರು, ಪ್ರಧಾನ ಕಾರ್ಯದಶಿರ್ ಅಶೋಕ್ ಪೂಜಾರಿ ಉಪಸ್ಥಿತರಿದ್ದರು.