ಗಾಂಧಿ ಜಯಂತಿಯಂದು ಜಿಮ್ಸ್ ಟ್ರಾಮಾ ಸೆಂಟರ್ ಉದ್ಘಾಟನೆ: ಸಚಿವ ಸುಧಾಕರ್
ಕಲಬುರಗಿ : ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಿರುವ ಟ್ರಾಮಾ ಸೆಂಟರ್ ಅನ್ನು ಅಕ್ಟೋಬರ್ ನಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಜಿಮ್ಸ್ ಗೆ ಭೇಟಿ ನೀಡಿ ಸಂಸ್ಥೆಯ ಕಾರ್ಯ ವೈಖರಿಯನ್ನು ಪರಿಶೀಲಿಸಿ ರವಿವಾರ ಅವರು ಮಾತನಾಡಿದರು. ಅಗತ್ಯವಾದ ಎಲ್ಲಾ ಕಾಮಗಾರಿ ಪೂರ್ಣಗೊಳಿಸಿ ಉಪಕರಣಗಳನ್ನು ತರಿಸುವ ಪ್ರಕ್ರಿಯೆ ಪೂರ್ಣ ಗೊಳಿಸಬೇಕು. ಅಗತ್ಯವಿರುವ ಸಿಬ್ಬಂದಿ ವಿವರಗಳನ್ನು ನಿರ್ದೇಶಕರಿಗೆ ಕಳುಹಿಸಿ ಒಪ್ಪಿಗೆ ಪಡೆದು ತ್ವರಿತವಾಗಿ ಟ್ರಾಮಾ ಸೆಂಟರ್ ಕಾರ್ಯಾರಂಭಿಸುವಂತೆ ನೋಡಿಕೊಳ್ಳಬೇಕು. ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಅದನ್ನು ಉದ್ಘಾಟಿಸಲು ಸಿದ್ಧತೆ ಪೂರ್ಣಗೊಳಿಸಬೇಕು ಎಂದು ಸಚಿವರು ಸೂಚಿಸಿದರು.
ಖಾಲಿಯಿರುವ 16 ಪ್ರೊಫೆಸರ್ ಹುದ್ದೆಗಳ ಭರ್ತಿಗೆ ತಕ್ಷಣವೇ ಅಧಿಸೂಚನೆ ಹೊರಡಿಸಿ ನೇಮಕ ಪ್ರಕ್ರಿಯೆ ಮುಗಿಸುವಂತೆ ಸೂಚಿಸಿದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡುವುದು ತಡ ಆಗುವುದರಿಂದ ಇಲಾಖೆ ಮೂಲಕವೇ ನೇರ ನೇಮಕ ಮಾಡಿ ಕೊಳ್ಳಲು ಅನುವಾಗುವಂತೆ ನೇಮಕ ನಿಯಮ ರೂಪಿಸಿ. ಇಲ್ಲವಾದಲ್ಲಿ ಬಹುತೇಕ ಎಲ್ಲ ಕಾಲೇಜುಗಳಲ್ಲಿ ನನೆಗುದಿಗೆ ಬಿದ್ದಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆಗುವುದಿಲ್ಲ ಎಂದು ಇಲಾಖೆ ನಿರ್ದೇಶಕರಿಗೆ ಸಭೆಯಲ್ಲಿ ಸೂಚನೆ ನೀಡಿದರು.
ಹೊರಗುತ್ತಿಗೆ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಗೊಳಿಸಬೇಕು. ಹಣಕಾಸು ಅಧಿಕಾರಿ ಹುದ್ದೆ ಖಾಲಿ ಬಿಡಬಾರದು ಅಥವಾ ಪ್ರಭಾರವು ಇರಬಾರದು ಪೂರ್ಣ ಪ್ರಮಾಣದ ಅಧಿಕಾರಿ ನೇಮಕ ಮಾಡುವಂತೆ ಸೂಚನೆ ನೀಡಿದರು.
ಕೋವಿಡ್ ಸಂದರ್ಭದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಹೌಸ್ ಕೀಪಿಂಗ್ ಸಿಬ್ಬಂದಿಯನ್ನು ಏಕೆ ಇಟ್ಟುಕೊಂಡಿದ್ದೀರಿ ? ಸ್ಥಳೀಯರಿಗೆ ಏಕೆ ಅವಕಾಶ ನೀಡಿಲ್ಲ ? ಇದರಿಂದ ಕೆಲಸ ಕಾರ್ಯಗಳಿಗೆ ತೊಂದರೆ ಆಗುವುದಿಲ್ಲವೇ ಎಂದು ನಿರ್ದೇಶಕ ರನ್ನು ತರಾಟೆಗೆ ತೆಗೆದುಕೊಂಡರು.
ಕಪ್ಪು ಪಟ್ಟಿಯಲ್ಲಿ ಇದ್ದವರಿಗೆ ರಕ್ಷಣಾ ವ್ಯವಸ್ಥೆಯ ಗುತ್ತಿಗೆ ನೀಡಿರುವ ಆರೋಪಗಳಿವೆ. ಇದನ್ನು ಪರಿಶೀಲಿಸಿ ಹೌಸ್ ಕೀಪಿಂಗ್ ಹೊರಗುತ್ತಿಗೆಗೆ ಸಂಬಂಧಿಸಿದಂತೆ ನಿರ್ದಿಷ್ಟ ನೀತಿ ಜಾರಿಗೆ ಕ್ರಮ ಜರುಗಿಸಲಾಗುವುದು ಎಂದರು.
ಸಂಸದರಾದ ಡಾ. ಉಮೇಶ್ ಜಾಧವ್, ಶಾಸಕರಾದ ರೇವೂರ, ಬಸವರಾಜ ಮಟ್ಟಿಮಡ್, ಅವಿನಾಶ್ ಜಾಧವ್, ನಿರ್ದೇಶಕ ಡಾ. ಗಿರೀಶ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ಗುಣಮುಖರಾದವರ ಸುದ್ದಿ ಮಾಡಿ
ಮಾಧ್ಯಮಗಳಲ್ಲಿ ಕೋವಿಡ್-19 ಸಂಬಂಧ ಹೊಸ ಹೊಸ ಪದ ಬಳಕೆ ಮಾಡಿ ಸೋಂಕಿತರ ಸಂಖ್ಯೆಯನ್ನು ಅಷ್ಟೇ ಪ್ರಚಾರ ಮಾಡುವುದರ ಬದಲಿಗೆ ದಿನನಿತ್ಯ ಎಷ್ಟು ಜನರು ಗುಣಮುಖರಾಗುತ್ತಿದ್ದಾರೆ ಎಂದು ಪ್ರಚಾರ ಮಾಡಿ. ಇದರಿಂದ ಜನರಲ್ಲಿನ ಆತಂಕ ದೂರವಾಗುತ್ತದೆ.
-ಡಾ.ಕೆ.ಸುಧಾಕರ್ ವೈದ್ಯಕೀಯ ಶಿಕ್ಷಣ ಸಚಿವ