ಸಮಾಜದ ಶಾಂತಿ ಕಾಪಾಡುವಲ್ಲಿ ಗೃಹರಕ್ಷಕರ ಕೊಡುಗೆ ಅಪಾರ : ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ, ಡಿ.11: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ರಕ್ಷಕದಳವು ಪೊಲೀಸರೊಂದಿಗೆ ಸಮನ್ವಯದಿಂದ ಪೂರಕ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.
ಶುಕ್ರವಾರ ಜಿಲ್ಲಾ ಗೃಹ ರಕ್ಷಕದಳದ ಕಚೇರಿ ಆವರಣದಲ್ಲಿ ನಡೆದ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಗೃಹರಕ್ಷಕ ದಳ ದಿನಾಚರಣೆಯನ್ನು ರಕ್ತದಾನ ಮಾಡುವ ಮೂಲಕ ಆಚರಿಸುತ್ತಿರುವುದು ಉತ್ತಮ ಮಾದರಿ. ಒಬ್ಬ ವ್ಯಕ್ತಿ ರಕ್ತದಾನ ಮಾಡುವ ಮೂಲಕ ನಾಲ್ಕು ಜನರ ಜೀವ ಉಳಿಸಿದಂತಾಗುತ್ತದೆ.ರಕ್ತದಾನ ಮಾಡುವುದರಲ್ಲಿ ಉಡುಪಿ ಮಾದರಿ ಜಿಲ್ಲೆಯಾಗಿದ್ದು, ಈ ನಿಟ್ಟಿನಲ್ಲಿ ಕೈಜೋಡಿಸಿದ ಗೃಹರಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.
ತುರ್ತು ಸಂದರ್ಭದಲ್ಲಿ ಸಮಾಜದಲ್ಲಿ ಶಾಂತಿ ಕಾಪಾಡುವಲ್ಲಿ ಗೃಹ ರಕ್ಷಕ ದಳದ ಪಾತ್ರ ಬಹಳ ಮುಖ್ಯ. ಇಂತಹ ಸಂದರ್ಭಗಳಲ್ಲಿ ಅತ್ಯಂತ ಕಾಳಜಿ ಯಿಂದ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ಪೊಲೀಸ್ ಇಲಾಖೆ ಸೂಚಿಸಿದ ಕರ್ತವ್ಯಗಳನ್ನು ಅವರೊಂದಿಗೆ ಸಮನ್ವಯ ಸಾಧಿಸಿ, ಉತ್ತಮವಾಗಿ ನಿರ್ವಹಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಮಾತನಾಡಿ, ಗೃಹ ರಕ್ಷಕರು ಪೊಲೀಸ್ ಇಲಾಖೆಯ ಅವಿಬಾಜ್ಯ ಅಂಗ ವಾಗಿ ಕೆಲಸ ನಿರ್ವಹಿ ಸುತಿದ್ದಾರೆ. ಗೃಹ ರಕ್ಷಕದಳದ ಸಿಬ್ಬಂದಿಗಳು ಸಮಾಜ ಮತ್ತು ನಾಗರಿಕರ ರಕ್ಷಣೆಗೆ ಬದ್ಧವಾಗಿದ್ದಾರೆ ಎಂದರು. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಗೃಹ ರಕ್ಷಕದಳದ ಸ್ವಯಂ ಸೇವಕರ ತ್ಯಾಗ ಮೆಚ್ಚುವಂತದ್ದು. ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಹ ಇವರ ಕೊಡುಗೆ ಅಪಾರ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಮಾಂಡೆಂಟ್ ಡಾ.ಕೆ. ಪ್ರಶಾಂತ್ ಶೆಟ್ಟಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 500 ಗೃಹ ರಕ್ಷಕರು ಕಾರ್ಯ ನಿರ್ವಹಿಸುತಿದ್ದಾರೆ. ಉಡುಪಿ, ಮಣಿಪಾಲ, ಕಾಪು, ಪಡುಬಿದ್ರೆ, ಕಾರ್ಕಳ, ಬ್ರಹ್ಮಾವರ, ಕುಂದಾಪುರ ಹಾಗೂ ಬೈಂದೂರುಗಳಲ್ಲಿ ಒಟ್ಟು 8 ಘಟಕಗಳಿವೆ. ಅಲ್ಲದೇ ಪ್ರವಾಸೋದ್ಯಮ ಇಲಾಖೆ, ಆರ್ಟಿಓ ಆಫೀಸ್, ಎನ್ಸಿಸಿ, ಕಾರಾಗೃಹದಲ್ಲಿ ಗೃಹರಕ್ಷಕ ದಳದವರು ಕಾರ್ಯನಿರ್ವಹಿಸುತ್ತಿದ್ದಾರೆ. ಕೊರೊನಾ ಸಮಯದಲ್ಲಿ ಧೈರ್ಯದಿಂದ ಕಾರ್ಯ ನಿರ್ವಹಿಸಿ, ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ ಎಂದರು.
ಗೃಹರಕ್ಷಕ ದಳ ದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು. ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಾದ ಪೊಲೀಸ್ ಅಧೀಕ್ಷಕರಾದ ಎನ್. ವಿಷ್ಣುವರ್ಧನ್, ಉಪಾಧೀಕ್ಷಕರಾದ ಜೈಶಂಕರ್, ವೃತ್ತ ನಿರೀಕ್ಷಕರಾದ ಮಂಜುನಾಥ, ಕಾನ್ಸ್ಟೇಬಲ್ ಸಂತೋಷ್, ಜಿಲ್ಲಾ ಕಮಾಂಡೆಂಟ್ ಡಾ. ಪ್ರಶಾಂತ ಶೆಟ್ಟಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ.ಕೃಷ್ಣ ಪ್ರಸಾದ್ ಕೂಡ್ಲು ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣ ಪ್ರಸಾದ್ ಮತ್ತಿತರರು ಉಪಸ್ಥಿತರಿ ದ್ದರು. ಜಿಲ್ಲಾ ಗೃಹ ರಕ್ಷಕ ದಳದ ಸೆಕೆಂಡ್ ಇನ್ ಕಮಾಂಡ್ ಕೆ.ಸಿ.ರಾಜೇಶ್ ಸ್ವಾಗತಿಸಿ, ಶ್ಯಾಮಲ ವಂದಿಸಿದರು. ಸಾಯಿನಾಥ್ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣ ಪ್ರಸಾದ್ ಮತ್ತಿತರರು ಉಪಸ್ಥಿತ ರಿದ್ದರು. ಜಿಲ್ಲಾ ಗೃಹ ರಕ್ಷಕ ದಳದ ಸೆಕೆಂಡ್ ಇನ್ ಕಮಾಂಡ್ ಕೆ.ಸಿ.ರಾಜೇಶ್ ಸ್ವಾಗತಿಸಿ, ಶ್ಯಾಮಲ ವಂದಿಸಿದರು. ಸಾಯಿನಾಥ್ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.