ಬೆಂಗಳೂರು ಗಲಭೆ ಪ್ರಕರಣ: ಈ ವರ್ಷ ಜೈಲಿನಲ್ಲೇ ಉಳಿಯಲಿರುವ ಮಾಜಿ ಮೇಯರ್ ಸಂಪತ್ರಾಜ್
ಬೆಂಗಳೂರು, ಡಿ.21: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಹೈಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಹೀಗಾಗಿ, ಸಂಪತ್ ರಾಜ್ ಈ ವರ್ಷ ಕಾರಾಗೃಹದಲ್ಲಿ ಕಾಲ ಕಳೆಯಬೇಕಿದೆ.
ಜಾಮೀನು ಕೋರಿ ಮಾಜಿ ಮೇಯರ್ ಸಂಪತ್ರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.
ಕೆಲ ಕಾಲ ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಿತು.
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ವೇಳೆ ಸಂಪತ್ ರಾಜ್ ತಮ್ಮ ಬೆಂಬಲಿಗರಿಗೆ ಕುಮ್ಮಕ್ಕು ನೀಡಿ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿ ಸಂಪತ್ ರಾಜ್ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.