ಎ.20ರಂದು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸಿಎಂ ಸಹಿತ ಪ್ರಮುಖರ ಸಭೆ
ಕೋವಿಡ್ 2ನೇ ಅಲೆ ತೀವ್ರ ಹಿನ್ನೆಲೆ
ಬೆಂಗಳೂರು, ಎ.19: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಡಳಿತ– ವಿರೋಧ ಪಕ್ಷಗಳ ನಾಯಕರು ಸೇರಿದಂತೆ ಉಭಯ ಸದನಗಳ ಮುಖಂಡರ ಜೊತೆ ಎ.20ರಂದು ವೀಡಿಯೊ ಸಂವಾದ ನಡೆಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ದೇಶಿಸಿದ್ದಾರೆ.
ಮಂಗಳವಾರ ಸಂಜೆ 4:30ಕ್ಕೆ ನಡೆಯಲಿರುವ ಈ ವಿಡಿಯೊ ಸಂವಾದ (ವರ್ಚುವಲ್ ಸಭೆ)ದ ಅಧ್ಯಕ್ಷತೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ವಹಿಸಲಿದ್ದಾರೆ. ಕೋವಿಡ್ ಗೆ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಮಣಿಪಾಲ್ ಆಸ್ಪತ್ರೆಯಿಂದಲೇ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಭಾಗವಹಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ಕುಮಾರ್ ಕಟೀಲು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ ರಾಜ್ಯ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಶಾಸಕರಾದ ಜಿ.ಪರಮೇಶ್ವರ್, ಎಚ್.ಡಿ.ರೇವಣ್ಣ ಅವರಿಗೆ ಆಹ್ವಾನ ನೀಡಲಾಗಿದೆ. ಎಲ್ಲರೂ ವಿಡಿಯೊ ಲಿಂಕ್ ಮೂಲಕ ಸಭೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.