ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 100 ಎಕರೆ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ ನೆಡುವ ಯೋಜನೆ: ಲಿಂಬಾವಳಿ
ಬ್ರಹ್ಮಾವರ, ಜು.11: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಾಶವಾಗಿರುವ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಅರಣ್ಯ ಬೆಳೆಸುವ ಪೈಲಟ್ ಯೋಜನೆಯಂತೆ ಉಡುಪಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 100 ಎಕರೆ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಇಲಾಖೆಯಿಂದ ಹಮ್ಮಿಕೊಳ್ಳಲಾಗುವುದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಬಹ್ಮಾವರ-ಸೀತಾನದಿ ಮುಖ್ಯರಸ್ತೆಯ ಅಗಲೀಕರಣ ಸಂದರ್ಭದಲ್ಲಿ 1014 ಮರಗಳನ್ನು ಕಡಿದ ಬದಲಿಗೆ 3000 ಮರಗಳನ್ನು ನೆಡುವ ಕಾರ್ಯ ಕ್ರಮಕ್ಕೆ ಬ್ರಹ್ಮಾವರ ಕೃಷಿ ಕೇಂದ್ರದ ಸಮೀಪ ರವಿವಾರ ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಚಾಲೆ ನೀಡಿ ಅವರು ಮಾತನಾಡುತಿದ್ದರು.
ರಸ್ತೆ ಅಗಲೀಕರಣ ಅಥವಾ ಸರಕಾರಿ ಕಟ್ಟಡ ನಿರ್ಮಿಸುವ ಸಂದರ್ಭ ಮರ ಗಳನ್ನು ಕಡಿದರೆ ಅದರ ಬದಲಿಗೆ 10 ಮರಗಳನ್ನು ನೆಡಬೇಕೆಂಬುದು ಇಲಾಖೆ ಯಲ್ಲಿ ನಿಯಮ ಇದೆ. ಅದರಂತೆ ಇಂದು ರಸ್ತೆ ಬದಿಯಲ್ಲಿ 3000 ಹಾಗೂ ಇತರ ಕಡೆ 7000 ಸೇರಿದಂತೆ ಒಟ್ಟು 10ಸಾವಿರ ಗಿಡ ಗಳನ್ನು ನೆಡಲಾಗುವುದು. ಆ ಗಿಡಗಳ ಕೇರ್ ಟೇಕರ್ಗಳು ನಾವು ಆಗಬೇಕು. ಅವುಗಳನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಿದೆ. ಈ ರೀತಿ ಅರಣ್ಯ ಬೆಳೆಸಿದರೆ ಮಾತ್ರ ಪರಿಸರ ರಕ್ಷಣೆ ಮಾಡಲು ಸಾಧ್ಯವಾಗುತ್ತದೆ ಎಂದರು.
ರಾಜ್ಯದ ಹಲವು ಕಡೆಗಳಲ್ಲಿ ಮರಗಳನ್ನು ಕಡಿದ ಬದಲಿಗೆ ಗಿಡಗಳನ್ನು ನೆಡುವ ಕಾರ್ಯಕ್ರಮ ಅನುಷ್ಠಾನಗೊಳ್ಳದೆ ಬಾಕಿ ಉಳಿದಿದೆ. ಮುಂದಿನ ದಿನಗಳಲ್ಲಿ ಬಾಕಿ ಇರುವ ಕಡೆಗಳಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್, ಚಾಂತಾರು ಗ್ರಾಪಂ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ಉಪಾಧ್ಯಕ್ಷೆ ಲಕ್ಷ್ಮೀ, ಅರಣ್ಯ ಇಲಾಖೆಯ ಎಪಿಸಿಸಿಎಫ್, ಮಂಗಳೂರು ವೃತ್ತದ ನೋಡಲ್ ಅಧಿಕಾರಿ ಮಿಲ್ಲೋ ಟ್ಯಾಗೋ, ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ ಎಸ್.ನೆಟಾಲ್ಕರ್, ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.