ಬಿಜೆಪಿ ಸರಕಾರವನ್ನು ಕಿತ್ತೆಸೆಯುವವರೆಗೆ ಹೋರಾಟ : ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷ ರಾಮಯ್ಯ
ಉಡುಪಿ, ಜು.14: ಮುಂದಿನ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರಕಾರವನ್ನು ಕಿತ್ತೆಸೆಯುವ ನಿಟ್ಟಿನಲ್ಲಿ ನಾವು ಹೋರಾಟ ಮಾಡ ಬೇಕಾಗಿದೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಕ್ಷಾ ರಾಮಯ್ಯ ಹೇಳಿದ್ದಾರೆ.
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಉಡುಪಿ ಕಾಂಗ್ರೆಸ್ ಭವನ ದಲ್ಲಿ ಇಂದು ಹಮ್ಮಿಕೊಳ್ಳಲಾದ ಸಭೆಯನ್ನುದ್ದೇಶಿಸಿ ಅವರು ಮಾತ ನಾಡುತಿದ್ದರು. 2012ರಲ್ಲಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದ ಪ್ರಧಾನಿ ನರೇಂದ್ರ ಮೋದಿ ಕೇವಲ ಸುಳ್ಳು ಹೇಳಿಕೊಂಡ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದು ಆರೋಪಿಸಿದರು.
ನಿರುದ್ಯೋಗ ನಿರ್ಮೂಲನೆ ಮಾಡಲು ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆಯನ್ನು ಮೋದಿ ನೀಡಿದ್ದರು. ಆದರೆ ಇವರು ಅಧಿ ಕಾರಕ್ಕೆ ಬಂದ ಬಳಿಕ ಅಪರಾಧ ಪ್ರಕರಣ ಶೇ.30ರಿಂದ 40ರಷ್ಟು ಏರಿಕೆಯಾಗಿದೆ. ಕೋಮವಾದಿ ಸರಕಾರ ಧರ್ಮಗಳ ಮಧ್ಯೆ ಧ್ವೇಷ ಹರಡು ವುದನ್ನು ಬಿಟ್ಟು ಬೇರೆ ಯಾವುದೇ ಜನಪರ ಕೆಲಸ ಮಾಡಿಲ್ಲ. ರಾಜ್ಯದಿಂದ ಆಯ್ಕೆಯಾದ 25 ಸಂಸದರು ಕೂಡ ಯಾವುದೇ ಕಾರ್ಯ ಮಾಡುತ್ತಿಲ್ಲ ಎಂದು ಅವರು ದೂರಿದರು.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಇಂದು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಅಂದಿನ ತುರ್ತು ಪರಿಸ್ಥಿತಿಯಲ್ಲಿ ದೇಶ ವಿರೋಧಿಯಾಗಿದ್ದವರನ್ನು ಸೆರೆಮನೆಗೆ ಕಳುಹಿಸಿದ್ದರೆ, ಈಗ ದೇಶದ ಎಲ್ಲ 135ಕೋಟಿ ಜನರನ್ನು ಕೂಡ ಗೃಹ ಬಂಧನದಲ್ಲಿ ಇಡುವ ಕೆಲಸವನ್ನು ಕೇಂದ್ರ ಸರಕಾರ ಮಾಡಿದೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಯಾದವ್, ವಿದ್ಯಾ ಬಾಲಕೃಷ್ಣನ್, ಸುರಭಿ ದ್ವಿವೇದಿ, ಯುವ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್, ಉಪಾಧ್ಯಕ್ಷ ವಿಶ್ವಾಸ್ ಅಮೀನ್ ಮಾತನಾಡಿದರು.
ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಆಪತ್ಬಾಂಧವ ಆಸೀಫ್, ನಿತ್ಯಾನಂದ ಒಳಕಾಡು, ಶಂಶುದ್ದೀನ್, ಈಶ್ವರ್, ಅನ್ಸಾರ್ ಅಹ್ಮದ್, ಡಾ.ಸುನೀತಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ ಕೆ.ಆರ್., ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಹನುಮ ಕಿಶೋರ್, ರಾಜ್ಯ ಕಾರ್ಯದರ್ಶಿ ಹಾಗೂ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ದೀಪಿಕಾ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಂ.ಜ್ಯೋತಿಷ್, ಮನ್ನಾರ್ ಮನ್ನನ್, ನಗರಸಭೆ ಸದಸ್ಯ ರಮೇಶ್ ಕಾಂಚನ್, ಎನ್ಎಸ್ಯುಐ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್, ಅಬ್ದುಲ್ ಅಝೀಝ್ ಹೆಜಮಾಡಿ, ನವೀನ್ಚಂದ್ರ ಶೆಟ್ಟಿ, ಹರೀಶ್ ಕಿಣಿ ಮೊದಲಾದ ವರು ಉಪಸ್ಥಿತರಿದ್ದರು. ಸುರಯ್ಯ ಅಂಜುಮ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.