ಯುವಜನತೆ ಭಾರತದ ರತ್ನಗಳಾಗಬೇಕು: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ
ಮಂಗಳೂರು, ಜ.12: ಸ್ವಾಮಿ ವಿವೇಕಾನಂದರು ಜಗತ್ತಿನಲ್ಲಿ ಭಾರತೀಯತೆಯನ್ನು ಎತ್ತಿ ಹಿಡಿದ ಮೇರು ವ್ಯಕ್ತಿಯಾಗಿದ್ದರು. ಇಂದಿನ ಯುವ ಜನತೆ ದುಶ್ಚಟಗಳಿಂದ ದೂರವಿದ್ದು, ಸುಂದರ ಸಮಾಜದ ನಿರ್ಮಾಣಕ್ಕೆ ಕಟಿಬದ್ಧರಾಗಬೇಕು. ವಿವೇಕಾನಂದರ ಆದರ್ಶಗಳನ್ನು ಪಾಲಿಸಿ ದೇಶ ಎಂದೂ ಮರೆಯದ ಭಾರತದ ರತ್ನಗಳಾಗಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು.
ದ.ಕ.ಜಿಲ್ಲಾಡಳಿತ, ನೆಹರೂ ಯುವ ಕೇಂದ್ರ ಹಾಗೂ ನಗರದ ರಥಬೀದಿಯ ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರಕಾರಿ ಕಾಲೇಜಿನಲ್ಲಿ ಬುಧವಾರ ನಡೆದ ಸ್ವಾಮಿ ವಿವೇಕಾನಂದರ 159ನೇ ಜನ್ಮದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಯುವ ದಿನಾಚರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜಶೇಖರ್ ಹೆಬ್ಬಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ. ಪ್ರಕಾಶಚಂದ್ರ ಶಿಶಿಲ, ಡಾ.ಶೈಲಾರಾಣಿ ಬಿ, ಡಾ.ಶೇಷಪ್ಪಕೆ, ಪ್ರೊ. ಗೋಪಾಲ್ ಎಂ ಗೋಖಲೆ ಉಪಸ್ಥಿತರಿದ್ದರು.
ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ರಘುವೀರ್ ಸೂಟರ್ಪೇಟೆ ಪ್ರಸ್ತಾವಿಕವಾಗಿ ಮಾತನಾಡಿದರು. ಡಾ. ನವೀನ್ ಕೊಣಾಜೆ ಸ್ವಾಗತಿಸಿದರು. ವಿದ್ಯಾರ್ಥಿ ದೀಕ್ಷಾ ಮತ್ತು ಬಳಗದವರು ಆಶಯಗೀತೆ ಹಾಡಿದರು. ಪ್ರೊ.ಜೆಫ್ರಿ ರೊಡ್ರಿಗಸ್ ವಂದಿಸಿದರು.