ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಮಂಗಳೂರು : ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕು. ಎನ್ಪಿಎಸ್ ರದ್ದು ಮಾಡಿ ಹಳೆಯ ಪಿಂಚಣಿಯನ್ನು ಪೌರ ಕಾರ್ಮಿಕರಿಗೆ ಜಾರಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಇಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಪೌರಕಾರ್ಮಿಕರ ಮತ್ತು ನಾಲ್ಕನೇ ದರ್ಜೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.
ಇಂದು ಸಾಂಕೇತಿಕ ಮುಷ್ಕರ ನಡೆಸಿದ ಸಂಘದ ಮುಖಂಡರು, ಸದಸ್ಯರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದಪರು. ಒಂದು ತಿಂಗಳೊಳಗೆ ಸಮಸ್ಯೆ ಬಗೆಹರಿಯದಿದ್ದಲ್ಲಿ ಅನಿರ್ದಿಷ್ಟಾ ವಧಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿರುವುದಾಗಿ ಸಂಘದ ಮುಖಂಡರು ತಿಳಿಸಿದ್ದು, ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರತಿಭಟನಾ ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸಿದರು.
ಜಿಲ್ಲಾ ಪೌರಕಾರ್ಮಿಕರ ಮತ್ತು ನಾಲ್ಕನೇ ದರ್ಜೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ದಲಿತ ಮುಖಂಡರಾದ ಎಸ್.ಪಿ. ಆನಂದ, ವಿಶು ಕುಮಾರ್, ಕಮಲಾಕ್ಷ ಮೊದಲಾದವರ ಉಪಸ್ಥಿತಿಯಲ್ಲಿ ಪ್ರತಿಭಟನೆ ನಡೆಯಿತು.
ಎನ್ಪಿಎಸ್ ರದ್ದು ಮಾಡಿ ಹಳೇ ಪಿಂಚಣಿ ವ್ಯವಸ್ಥೆ ಜಾರಿತರಬೇಕು. ಎಲ್ಲ ಪೌರ ಕಾರ್ಮಿಕರಿಗೆ ವೈಯಕ್ತಿಕ ೫ ಲಕ್ಷ ರೂ. ವರೆಗೆ ಆರೋಗ್ಯ ಭದ್ರತೆ ನೀಡಬೇಕು. ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಪ್ರತ್ಯೇಕ ನಿಧಿ ಮೀಸಲಿಡಬೇಕು. ಮನೆ ನಿರ್ಮಾಣಕ್ಕೆ ನೀಡುವ ಸಹಾಯಧನವನ್ನು ೧೫ ಲಕ್ಷ ರೂ.ಗೆ ಏರಿಸಬೇಕು. ವಾರ್ಡ ಕಚೇರಿಗಳಲ್ಲಿ ಪೌರ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ನಿರ್ಮಿಸಬೇಕು ಎಂಬ ಸ್ಥಳೀಯ ಬೇಡಿಕೆಗಳ ಈಡೇರಿಕೆಗೂ ಮನವಿಯಲ್ಲಿ ಆಗ್ರಹಿಸಲಾಗಿದೆ.