ರಾಜ್ಯದಲ್ಲಿ ಇನ್ನೂ 2 ದಿನ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು, ಆ.5: ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಎಲ್ಲ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಆ.6ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45 ಕೀ.ಮೀ.ನಿಂದ 60 ಕಿ.ಮೀ.ತಲುಪುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಇಲಾಖೆ ಸೂಚಿಸಿದೆ.
ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ: ಬೆಂಗಳೂರಿನಲ್ಲಿ ಶನಿವಾರ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಮ್ಮೊಮ್ಮೆ ಭಾರಿ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ.
ಧಾರಾಕಾರ ಸುರಿದ ಮಳೆ : ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಗುರುವಾರ ಮತ್ತು ಶುಕ್ರವಾರವೂ ಧಾರಾಕಾರವಾಗಿ ಮಳೆ ಸುರಿದಿದೆ.