ಬೈಂದೂರು; ಕೇಂದ್ರ ಪಂಚಾಯತ್ರಾಜ್ ಸ್ಥಾಯಿ ಸಮಿತಿ ಸಭೆ
ಬೈಂದೂರು: ಕೇಂದ್ರ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಆ.20ರಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಈ ಸಭೆಯಲ್ಲಿ ಸಮಿತಿಯ ಸದಸ್ಯರಾದ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದೂರವಾಣಿ ಸಂಪರ್ಕ, ಅಂಗನವಾಡಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸುವ ಬಗ್ಗೆ ಹಾಗೂ ಕಾಲು ಸಂಕಗಳ(ಫೂಟ್ ಬ್ರಿಡ್ಜ್) ನಿರ್ಮಾಣ ಮಾಡುವ ಬಗ್ಗೆ ಚರ್ಚಿಸಿ ಕೂಡಲೇ ಈ ವಿಷಯಗಳ ಬಗ್ಗೆ ಗಮನಹರಿಸಿ ಸೂಕ್ತ ಪರಿಹಾರವನ್ನು ನೀಡುವ ಬಗ್ಗೆ ವಿನಂತಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ಇಲಾಖೆಗಳ ಮುಖ್ಯಸ್ಥರು, ರಾಜ್ಯ ಲೀಡ್ ಬ್ಯಾಂಕಿನ ಮುಖ್ಯಸ್ಥರು, ಕೆನರಾ ಬ್ಯಾಂಕು, ಯೂನಿಯನ್ ಬ್ಯಾಂಕ್ ಮುಖ್ಯಸ್ಥರು ಹಾಗೂ ಇತರ ಅಧಿಕಾರಿಗಳೊಂದಿಗೆ ವಿವಿಧ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಟಾನದ ಬಗ್ಗೆ ಸಹ ಚರ್ಚಿಸಲಾಯಿತು. ರಾಜ್ಯದ ವಿವಿಧ ಕೈಗಾರಿಕೋಧ್ಯಮದವರೊಂದಿಗೆ ಸಿ.ಎಸ್.ಆರ್. ಫಂಡ್ ಅನ್ನು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬಳಸುವ ಬಗ್ಗೆ ಸಹ ಚರ್ಚಿಸಲಾಯಿತು.
ಸಭೆಯಲ್ಲಿ ಸಮಿತಿಯ ಅಧ್ಯಕ್ಷ ಪ್ರತಾಪ್ ರಾವ್ ಜಾಧವ್, ಸಮಿತಿಯ ಇತರ ಸಂಸತ್ ಸದಸ್ಯರು, ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತಿಕ್ ಮೊದಲಾದವರು ಭಾಗವಹಿಸಿದ್ದರು.