100 ಕಾಲುಸಂಕಗಳಿಗೆ 5ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ: ಬಿ.ವೈ.ರಾಘವೇಂದ್ರ
ಕುಂದಾಪುರ, ಆ.25: ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ 250 ಕಾಲು ಸಂಕಗಳ ಪಟ್ಟಿ ಮಾಡಲಾಗಿದ್ದು, ಆರು ತಿಂಗಳ ಹಿಂದೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಇದೀಗ ಮತ್ತೆ ರಾಜ್ಯ ಲೋಕೋಪಯೋಗಿ ಇಲಾಖಾ ಸಚಿವರೊಂದಿಗೆ ಮಾತುಕತೆ ನಡೆಸಿ 100 ಕಾಲುಸಂಕಗಳಿಗೆ 5 ಕೋಟಿ ಅನುದಾನ ಬಿಡುಗಡೆಗೆ ಅನು ಮೋದನೆ ಪಡೆಯಲಾಗಿದೆ. ಕ್ಷೇತ್ರದಲ್ಲಿ ಕಾಲು ಸಂಕಗಳ ಅಭಿವೃದ್ದಿಗೆ ಇನ್ನೂ 15 ಕೋಟಿ ಅನುದಾನ ಬಿಡುಗಡೆಗೆ ಪ್ರಯತ್ನ ಮಾಡಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.
ಕೊಲ್ಲೂರಿನಲ್ಲಿ ಗುರುವಾರ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಅತಿವೃಷ್ಠಿ ಯಿಂದಾಗಿ ಸಾಕಷ್ಟು ಆಸ್ತಿ-ಪಾಸ್ತಿಗಳು ಹಾನಿಯಾಗಿವೆ. ಅತಿವೃಷ್ಠಿಯಿಂದಾಗಿ ಮನೆ, ಆಸ್ತಿ, ಬೆಳೆ ಹಾನಿಯಾದವರಿಗೆ ಮತ್ತು ಮೀನುಗಾರಿಕಾ ಬೋಟು, ಬಲೆಗಳನ್ನು ಕಳೆದುಕೊಂಡವರಿಗೆ ತುರ್ತು ಪರಿಹಾರವನ್ನು ಈಗಾಗಲೇ ನೀಡಲಾಗಿದೆ. ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ, ದೋಣಿ, ಮೀನಿನ ಬಲೆ ಹಾನಿಯಾದವರ ಸಮೀಕ್ಷೆ ನಡೆಸಿ ಕೇಂದ್ರ ಸರಕಾರದ ಪ್ರಕೃತಿ ವಿಕೋಪದ ಅಡಿಯಲ್ಲಿ ಸುಮಾರು 50 ಲಕ್ಷ ರೂ.ಗಿಂತ ಹೆಚ್ಚು ಅನುದಾನವನ್ನು ಬೈಂದೂರು ಕ್ಷೇತ್ರಕ್ಕೆ ಕೊಟ್ಟಿದ್ದೇವೆ ಎಂದರು.
ಪಿಪಿಪಿ ಮಾದರಿಯಲ್ಲಿ 228.00 ಕೋಟಿ ರೂ. ವೆಚ್ಚದಲ್ಲಿ ಅಂತರಾಷ್ಟ್ರೀಯ ಮಟ್ಟದ ಸೀ ಪ್ಲೇನ್, ಮರೀನಾ ಹಾಗೂ ಬಹುಪಯೋಗಿ ಬಂದರು ಯೋಜನೆ ಟೆಂಡರ್ ಹಂತದಲ್ಲಿದೆ. 165.00 ಕೋಟಿ ರೂ. ವೆಚ್ಚದ ಸಿದ್ದಾಪುರ ಏತ ನೀರಾವರಿ ಯೋಜನೆ ಅನುಮೋದನೆ ದೊರೆತಿದೆ. 73.71 ಕೋಟಿ ವೆಚ್ಚದಲ್ಲಿ ಸೌಕೂರು ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಂಡಿದೆ. 35 ಕೋಟಿ ವೆಚ್ಚದಲ್ಲಿ ಸುಬ್ಬರಾಡಿ ಕಿಂಡಿ ಅಣೆಕಟ್ಟು ಕಾಮಗಾರಿ ಪೂರ್ಣಗೊಂಡಿದ್ದು ಗೇಟ್ ಅಳವಡಿಕೆ ಕಾಮಗಾರಿ ಪ್ರಗತಿಯಲ್ಲಿದೆ. ಜೊತೆಗೆ ಮಾದರಿ ವಿದ್ಯುತ್ ಗ್ರಾಮ ಯೋಜನೆ ಅಡಿಯಲ್ಲಿ ಕಿರಿಮಂಜೇಶ್ವರ ಗ್ರಾಮದಲ್ಲಿ ಸಮಗ್ರ ವಿದ್ಯುತ್ ನಿರ್ವಹಣೆ ಯೋಜನೆ ಅಂತಿಮ ಹಂತದಲ್ಲಿದೆ ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.