ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ
ಗಾಂಧಿನಗರ: ಅದ್ದೂರಿಯಾಗಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಗುಜರಾತ್ ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದರು.
ಬಿಜೆಪಿ ಸತತ ಏಳನೆಯ ಬಾರಿ ಗುಜರಾತ್ ರಾಜ್ಯದ ಚುಕ್ಕಾಣಿ ಹಿಡಿದಿದ್ದು, ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಸೆಪ್ಟೆಂಬರ್ ತಿಂಗಳಲ್ಲಿ ವಿಜಯ್ ರೂಪಾನಿಯ ಬದಲಿಗೆ ಭೂಪೇಂದ್ರ ಪಟೇಲ್ ಮುಖ್ಯಮಂತ್ರಿಯಾಗಿ ನೇಮಕವಾಗಿದ್ದರು. ವಿಧಾನಸಭಾ ಚುನಾವಣೆಯ ಗೆಲುವಿನ ನಂತರವೂ ಭೂಪೇಂದ್ರ ಪಟೇಲ್ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್ನಾಥ್ ಸಿಂಗ್, ನಿತಿನ್ ಗಡ್ಕರಿ ಸೇರಿದಂತೆ ಹಲವು ಕೇಂದ್ರ ಸಚಿವರು ಭಾಗವಹಿಸಿದ್ದರು.
ಇದರೊಂದಿಗೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಬಿಜೆಪಿ ಮೈತ್ರಿ ಪಕ್ಷದ ನಾಯಕರೂ ಹಾಜರಿದ್ದರು. ಈ ಪೈಕಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕ್ನಾಥ್ ಶಿಂದೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಹಿರಿಯ ನಾಯಕ ಬಿ.ಎಲ್. ಸಂತೋಷ್ ಮತ್ತು ಬಿಜೆಪಿ ಚುನಾವಣೆಯಲ್ಲಿ ಭಾಗವಹಿಸಿದ್ದ ಸಂಸದರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಸಮಾರಂಭಕ್ಕೆ ವಿಶೇಷವಾಗಿ ಆಹ್ವಾನಿತರಾಗಿರುವ ರಾಜ್ಯದ 200 ಮಂದಿ ಸಾಧುಗಳಿಗೆ ಮುಖ್ಯ ವೇದಿಕೆಯ ಎಡಬಲದಲ್ಲಿ ವೇದಿಕೆ ನಿರ್ಮಿಸಲಾಗಿತ್ತು.