ಸಲಿಂಗ ವಿವಾಹ: ಸಮಿತಿ ರಚಿಸಲು ಕೇಂದ್ರ ಸರಕಾರ ನಿರ್ಧಾರ
ಹೊಸದಿಲ್ಲಿ, ಮೇ 3: ಸಲಿಂಗ ಜೋಡಿಗಳ ಕೆಲವು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಆಡಳಿತಾತ್ಮಕ ಕ್ರಮಗಳನ್ನು ಅನ್ವೇಷಿಸಲು ಸಮಿತಿಯೊಂದನ್ನು ರೂಪಿಸಲಾಗುವುದು ಎಂದು ಕೇಂದ್ರ ಸರಕಾರ ಬುಧವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿದ ಅರ್ಜಿಗಳ ಗುಚ್ಛದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ನಡೆಸಿತು.
ನಿಜವಾದ ಮಾನವೀಯ ಕಾಳಜಿಯನ್ನು ಒಳಗೊಂಡ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಸಿದ್ಧವಿದೆ. ಇದಕ್ಕೆ ಒಂದಕ್ಕಿಂತ ಹೆಚ್ಚಿನ ಸಚಿವಾಲಯಗಳ ನಡುವೆ ಸಮನ್ವಯತೆಯ ಅಗತ್ಯತೆ ಇದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪೀಠಕ್ಕೆ ತಿಳಿಸಿದರು.
ಇದಕ್ಕೆ ಸಂಬಂಧಿಸಿ ಯಾವ ಆಡಳಿತಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ಅನ್ವೇಷಿಸುವ ಕುರಿತು ದೂರುದಾರರು ತಮ್ಮ ಸಲಹೆಗಳನ್ನು ನೀಡಬಹುದು ಎಂದು ಮೆಹ್ತಾ ಅವರು ಹೇಳಿದರು.
Next Story