ಭೋವಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣ : ಮಾಜಿ ಎಂಡಿ ಬಂಧನ
ಸಾಂದರ್ಭಿಕ ಚಿತ್ರ | PC : freepik.com
ಬೆಂಗಳೂರು : ರಾಜ್ಯ ಭೋವಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿ. ಕೆ. ನಾಗರಾಜಪ್ಪ ಅವರನ್ನು ಈಡಿ ತನಿಖಾಧಿಕಾರಿಗಳು ಬಂಧಿಸಿದ್ದಾರೆ.
ಶನಿವಾರ ತಡರಾತ್ರಿ ನಾಗರಾಜಪ್ಪ ಅವರನ್ನು ಬಂಧಿಸಲಾಗಿದ್ದು, 14 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.ಇನ್ನೂ, ಬೆಂಗಳೂರಿನ ಅಂಬೇಡ್ಕರ್ ರಸ್ತೆಯಲ್ಲಿನ ವಿವಿ ಟವರ್ನಲ್ಲಿರುವ ನಿಗಮದ ಕಚೇರಿ ಸೇರಿದಂತೆ ಹಗರಣದ ಆರೋಪಿಗಳು, ಅನುಮಾನಿತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಎರಡು ದಿನಗಳ ಹಿಂದೆ ಈಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.
ಪರಿಶೀಲನೆ ವೇಳೆ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು, ಡಿಜಿಟಲ್ ದಾಖಲೆಗಳು, ಆಸ್ತಿ ವಿವರಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ನಾಗರಾಜಪ್ಪ ಅವರನ್ನ ಬಂಧಿಸಲಾಗಿದೆ ಎಂದು ಈಡಿ ಮಾಹಿತಿ ಹಂಚಿಕೊಂಡಿದೆ.
ಏನಿದು ಪ್ರಕರಣ?: ಭೋವಿ ಅಭಿವೃದ್ಧಿ ನಿಗಮದ ಉದ್ಯಮಶೀಲತಾ ಯೋಜನೆ ಮತ್ತು ನೇರ ಸಾಲ ಯೋಜನೆಗಳಡಿ ಲಕ್ಷಾಂತರ ರೂ. ಸಾಲ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿ ಸಾರ್ವಜನಿಕರ ಗುರುತಿನ ದಾಖಲೆಗಳು, ಬ್ಯಾಂಕ್ ಚೆಕ್ ಪಡೆದು ದುರ್ಬಳಕೆ ಮಾಡಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆ ಈಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.