ರಾಹುಲ್ ಗಾಂಧಿ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯದಲ್ಲಿ ಅಧಿಕಾರದಲ್ಲಿದ್ದ ತನ್ನ ಸರಕಾರವು ಗುತ್ತಿಗೆದಾರರಿಂದ ಲಂಚಗಳನ್ನು ಸ್ವೀಕರಿಸಿತ್ತು ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಬಿಜೆಪಿಯು ದಾಖಲಿಸಿರುವ ಪ್ರಕರಣದ ವಿಚಾರಣೆಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಶುಕ್ರವಾರ ತಡೆಯನ್ನು ನೀಡಿದೆ.
ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ರಾಹುಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಈ ತಡೆಯಾಜ್ಞೆಯನ್ನು ಹೊರಡಿಸಿದರು. ರಾಹುಲ್ ಅರ್ಜಿಗೆ ಉತ್ತರಿಸುವಂತೆಯೂ ಅವರು ಬಿಜೆಪಿಗೆ ನೋಟಿಸ್ ಹೊರಡಿಸಿದರು.
ಬಿಜೆಪಿ ನಾಯಕ ಎಸ್.ಕೇಶವ್ ಪ್ರಸಾದ್ ಅವರು ಮೇ 2023ರಲ್ಲಿ ರಾಹುಲ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ದೂರನ್ನು ಸಲ್ಲಿಸಿದ್ದರು.
2019ರಿಂದ 2023ರವರೆಗೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರವು ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ನೀಡಲು ಶೇ.40ರಷ್ಟು ಕಮಿಷನ್ ಪಡೆಯುತ್ತಿತ್ತು ಎಂದು ವಿಧಾನಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಕಾಂಗ್ರೆಸ್ ಮಾಡಿದ್ದ ಆರೋಪಗಳಿಗೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಆಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ತನ್ನ ನಾಯಕರ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪಗಳನ್ನು ಹರಡುತ್ತಿದೆ ಎಂದೂ ಬಿಜೆಪಿ ಆಪಾದಿಸಿದೆ.
ಶುಕ್ರವಾರ ಉಚ್ಚ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಫೆ.20ಕ್ಕೆ ನಿಗದಿಗೊಳಿಸಿತು.
ಜೂ.7ರಂದು ಬೆಂಗಳೂರಿನ ವಿಚಾರಣಾ ನ್ಯಾಯಾಲಯವು ಪ್ರಕರಣದಲ್ಲಿ ರಾಹುಲ್ಗೆ ಜಾಮೀನು ಮಂಜೂರು ಮಾಡಿತ್ತು. ಜೂ.1ರಂದು ಜಾರಿಗೊಳಿಸಲಾಗಿದ್ದ ಸಮನ್ಸ್ಗೆ ಅನುಗುಣವಾಗಿ ರಾಹುಲ್ ನ್ಯಾಯಾಲಯದಲ್ಲಿ ಹಾಜರಾಗಿದ್ದರು. ಅದೇ ದಿನ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರೂ ಹಾಜರಾಗಿದ್ದು,ನ್ಯಾಯಾಲಯವು ಅವರಿಗೂ ಜಾಮೀನು ಮಂಜೂರು ಮಾಡಿತ್ತು.